ಚನ್ನಪಟ್ಟಣ: ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳಕ್ಕೆ ನಿರ್ಲಕ್ಷ್ಯ ಕಾರಣ ಎಂದು ಶಾಸಕ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಚನ್ನಪಟ್ಟಣದ ಗೋವಿಂದಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಒಂದೇ ದಿನದಲ್ಲಿ 62 ಕೊರೊನಾ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು. ಅದನ್ನು ಲಘುವಾಗಿ ಪರಿಗಣಿಸಿದ್ದರಿಂದ ಇದೀಗ ಅನಾಹುತ ಹೆಚ್ಚಾಗುತ್ತಿದೆ ಎಂದರು.
ಮುಂಬೈಯಿಂದ ಬಂದ ಇನ್ನೂ 900 ಮಂದಿಯ ವರದಿ ಬರಬೇಕಿದೆ. ವರದಿ ಬಂದಾಗ ಇನ್ನೆಷ್ಟು ಮಂದಿಗೆ ಕೊರೊನಾ ಪಾಸಿಟಿವ್ ಬರಲಿದೆಯೋ ತಿಳಿಯುತ್ತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ರಾಮನಗರ ಜಿಲ್ಲೆ ಮಂಡ್ಯ ಜಿಲ್ಲೆಯ ಗಡಿಯಲ್ಲೇ ಇರುವುದರಿಂದ ಇಲ್ಲಿನ ಅಧಿಕಾರಿಗಳು ಮೈಮರೆಯಬಾರದು. ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ಇದರ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.