ಬೆಂಗಳೂರು: ರಾಜ್ಯಕ್ಕೆ ‘ಕೋವಿಡ್ ಪ್ಯಾಕೇಜ್’ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕೊರೊನಾ ವೈರಸ್ ನಿಯಂತ್ರಣ, ಲಾಕ್ಡೌನ್ ಕುರಿತಂತೆ ಇಂದು ಪ್ರಧಾನ ಮಂತ್ರಿಯವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಇದರಲ್ಲಿ ರಾಜ್ಯದ ಮುಖ್ಯಮಂತ್ರಿಗಳೂ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಬಿಎಸ್ವೈ ಅವರು ರಾಜ್ಯಕ್ಕೆ ’ಕೋವಿಡ್ ಪ್ಯಾಕೇಜ್’ ನೀಡುವಂತೆ ಮೋದಿ ಅವರನ್ನು ಆಗ್ರಹಿಸಬೇಕು’ ಎಂದು ಉಲ್ಲೇಖಿಸಿದ್ದಾರೆ.
ಕಳೆದ 3 ದಿನಗಳ ಅಂಕಿಅಂಶ ಗಮನಿಸಿದರೆ ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವಂತೆ ಕಾಣುತ್ತಿದೆ. ಹೀಗಾಗಿ ವೈದ್ಯಕೀಯ ಕ್ರಮಗಳನ್ನು ಬಿಗಿಗೊಳಿಸಬೇಕಿದೆ. ಜೊತೆಗೆ ನಷ್ಟಕ್ಕೊಳಗಾಗಿರುವ ಜನರಿಗೆ ಆರ್ಥಿಕ ಪರಿಹಾರ ನೀಡಬೇಕಿದೆ. ದೊಡ್ಡ ಮಟ್ಟದ ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ ಕೊಡುವ ಕರ್ನಾಟಕದಂತಹ ದೊಡ್ಡ ರಾಜ್ಯಕ್ಕೆ ಸೂಕ್ತ ಪ್ಯಾಕೇಜ್ ಅತ್ಯಗತ್ಯ ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.
‘ಕೋವಿಡ್ ಪ್ಯಾಕೇಜ್’ ಜೊತೆಗೆ ಜಿಎಸ್ಟಿ ಬಾಕಿ, ನೆರೆ-ಬರ ಪರಿಹಾರ ಸೇರಿದಂತೆ ಕೇಂದ್ರದಿಂದ ಬರಬೇಕಾದ ಇತರ ಬಾಕಿ ಹಣದ ಬಗ್ಗೆಯೂ ಮುಖ್ಯಮಂತ್ರಿಗಳು ಪ್ರಧಾನಿ ಜೊತೆಗಿನ ಸಭೆಯಲ್ಲಿ ಕೇಳಬೇಕು. ಲಾಕ್ಡೌನ್ನಿಂದಾಗಿ ರಾಜ್ಯ ಹಣಕಾಸಿನ ತೊಂದರೆ ಅನುಭವಿಸುತ್ತಿದೆ. ಈ ಹೊತ್ತಲ್ಲಿ ಕೇಂದ್ರದಿಂದ ಸೂಕ್ತ ನೆರವು ಬಾರದ ಹೊರತು ಕೋವಿಡ್ ನಿಯಂತ್ರಣ ಕಷ್ಟವಾಗಲಿದೆ’ ಎಂದು ಇನ್ನೊಂದು ಟ್ವೀಟ್ನಲ್ಲಿ ಅವರು ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.