ಬೆಂಗಳೂರು: ಲಾಕ್ಡೌನ್ ವಿಸ್ತರಿಸುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವನ್ನು ಬೆಂಬಲಿಸಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಶ್ರಮಿಕ ವರ್ಗದ ಒಂದು ಕೋಟಿ ಕುಟುಂಬಗಳಿಗೆ ತಲಾ ₹ 10,000 ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ತಲಾ ₹ 10,000 ನೀಡಿದರೆ ಒಟ್ಟು ₹ 10,000 ಕೋಟಿ ಬೇಕಾಗುತ್ತದೆ. ಮೇ ತಿಂಗಳಲ್ಲಿ ಅಬಕಾರಿ ಇಲಾಖೆಗೆ ಶೇಕಡ 150ರಷ್ಟು ಹೆಚ್ಚಿನ ವರಮಾನ ಸಂಗ್ರಹವಾಗಿದೆ. ಅನಗತ್ಯವಾಗಿ ಸಾವಿರಾರು ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಮಂಜೂರು ಮಾಡುವುದನ್ನು ಸ್ಥಗಿತಗೊಳಿಸಬೇಕು. ಲಭ್ಯವಿರುವ ಹಣದಲ್ಲಿ ₹ 10,000 ಕೋಟಿಯನ್ನು ಪರಿಹಾರ ವಿತರಣೆಗೆ ಬಳಸಬೇಕು’ ಎಂದು ಒತ್ತಾಯಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಲಾಕ್ಡೌನ್ ಮುಂದುವರಿಸುವುದು ಸೂಕ್ತ. ಆದರೆ, ಅದೇ ಸಂದರ್ಭದಲ್ಲಿ ಜನರಿಗೆ ಆರ್ಥಿಕ ನೆರವನ್ನೂ ನೀಡಬೇಕು. ಈಗ ಘೋಷಿಸಿರುವ ಪರಿಹಾರ ಪ್ಯಾಕೇಜ್ಗಳು ಅವೈಜ್ಞಾನಿಕವಾಗಿವೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.