ADVERTISEMENT

ಕುಮಾರಸ್ವಾಮಿ ‘ಲಾಟರಿ’ ಮುಖ್ಯಮಂತ್ರಿ: ಎಂ.ಪಿ. ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 16:16 IST
Last Updated 12 ಅಕ್ಟೋಬರ್ 2021, 16:16 IST
ಎಂ.ಪಿ. ರೇಣುಕಾಚಾರ್ಯ
ಎಂ.ಪಿ. ರೇಣುಕಾಚಾರ್ಯ   

ಬೆಂಗಳೂರು:‘ಎಚ್‌.ಡಿ. ಕುಮಾರಸ್ವಾಮಿ ಎರಡು ಬಾರಿ ‘ಲಾಟರಿ’ ಹೊಡೆದಂತೆ ಮುಖ್ಯಮಂತ್ರಿಯಾದರು. ಈಗ ಅಧಿಕಾರ ಕಳೆದುಕೊಂಡು ನೀರಿನಿಂದ ಹೊರಬಿದ್ದ ಮೀನಿನಂತಾಗಿದ್ದಾರೆ’ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಟೀಕಿಸಿದರು.

‘ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ರಹಸ್ಯವಾಗಿ ಭೇಟಿ ಮಾಡಿರುವ ಕಾರಣದಿಂದಾಗಿಯೇ ಅವರ ಆಪ್ತರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದಿದೆ’ ಎಂಬ ಕುಮಾರಸ್ವಾಮಿ ಹೇಳಿಕೆಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಬಗ್ಗೆ ಮಾತನಾಡದಿದ್ದರೆ ಕುಮಾರಸ್ವಾಮಿ ಅವರಿಗೆ ಊಟ ಸೇರುವುದಿಲ್ಲ’ ಎಂದರು.

ಆದಾಯ ತೆರಿಗೆ ಇಲಾಖೆ ಸ್ವತಂತ್ರವಾಗಿ ಕೆಲಸ ಮಾಡುತ್ತಿದೆ. ಐ.ಟಿ ದಾಳಿಗೆ ಪ್ರಧಾನಿ ನರೇಂದ್ರ ಮೋದಿ, ಸಿದ್ದರಾಮಯ್ಯ ಸೇರಿದಂತೆ ಯಾರು ಕಾರಣರಲ್ಲ. ಐ.ಟಿ ಅಧಿಕಾರಿಗಳು ರಾಜಕೀಯ ಪ್ರೇರಣೆಯಿಂದ ಕೆಲಸ ಮಾಡುವುದಿಲ್ಲ ಎಂದು ಹೇಳಿದರು.

ADVERTISEMENT

ಮೂಲೆಗುಂಪು ಮಾಡಿಲ್ಲ: ‘ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಕೆಲವರು ದುರುದ್ದೇಶದಿಂದ ಈ ರೀತಿ ಹೇಳಿಕೆ ನೀಡುತ್ತಾರೆ’ ಎಂದು ರೇಣುಕಾಚಾರ್ಯ ಹೇಳಿದರು.

ವೀರಶೈವ– ಲಿಂಗಾಯದ ಸಮುದಾಯದ ಎಲ್ಲ ಪಂಗಡಗಳ ಜನರೂ ಒಟ್ಟಿಗೆ ಇದ್ದಾರೆ. ಯಾವುದೇ ಒಡಕು ಇಲ್ಲ. ಆದರೆ, ಈ ಸಮುದಾಯ ಯಾವತ್ತೂ ಜಾತಿವಾದಿಯಾಗಿ ವರ್ತಿಸುವುದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.