ADVERTISEMENT

2005ರಲ್ಲೂ ಬಿಜೆಪಿ ದುಡ್ಡು ಪಡೆಯಲಾಗಿತ್ತೆ? ಜಮೀರ್‌ಗೆ ಕುಮಾರಸ್ವಾಮಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2021, 21:23 IST
Last Updated 31 ಮಾರ್ಚ್ 2021, 21:23 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: 2005ರಲ್ಲಿ ನಡೆದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದ ಜೆಡಿಎಸ್‌, ಆಗಲೂ ಚುನಾವಣಾ ವೆಚ್ಚಕ್ಕೆ ಬಿಜೆಪಿಯಿಂದ ಹಣ ಪಡೆದಿತ್ತೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಶಾಸಕ ಬಿ.ಜೆಡ್‌. ಜಮೀರ್‌ ಅಹಮ್ಮದ್ ಖಾನ್‌ ಅವರನ್ನು ಪ್ರಶ್ನಿಸಿದ್ದಾರೆ.

‘ಕುಮಾರಸ್ವಾಮಿ ಅವರು ಬಿಜೆಪಿಯಿಂದ ಹಣ ಪಡೆದು ಬಸವಕಲ್ಯಾಣ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ’ ಎಂದು ಜಮೀರ್‌ ಅಹಮ್ಮದ್ ಆರೋಪಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿ ಬುಧವಾರ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಈ ಪ್ರಶ್ನೆ ಮುಂದಿಟ್ಟಿದ್ದಾರೆ.

2005ರಲ್ಲಿ ಎಸ್.ಎಂ.ಕೃಷ್ಣ ಅವರ ರಾಜೀನಾಮೆ ಯಿಂದ ತೆರವಾಗಿದ್ದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆ ಯಲ್ಲಿ ಜಮೀರ್‌ ಅಹಮ್ಮದ್ ಅವರನ್ನು ಜೆಡಿಎಸ್‌ ಕಣಕ್ಕಿಳಿಸಿತ್ತು. ಆಗ ಅವರು ಜಯ ಗಳಿಸಿದ್ದರು.

ADVERTISEMENT

‘ಚಾಮರಾಜಪೇಟೆ ಉಪಚುನಾವಣೆ ಯಲ್ಲಿ ಮತದಾನಕ್ಕೆ ಎರಡು ದಿನಗಳು ಇರುವಾಗ ನಮ್ಮ ‘ಮುಸ್ಲಿಂ’ ಅಭ್ಯರ್ಥಿ ಹಣದ ಕೊರತೆಯ ಕಾರಣದಿಂದ ಕಾಣೆಯಾಗಿದ್ದರು. ಶಿವಮೊಗ್ಗದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೆ’ ಎಂದು ಕೇಳಿದ್ದಾರೆ.

‘ಆ ಮುಸ್ಲಿಂ ಅಭ್ಯರ್ಥಿಯ ಗೆಲುವಿಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿ, ಗಲ್ಲಿ ಸುತ್ತಿ ಬೆವರು ಹರಿಸಿದ್ದರು. ದೇವೇಗೌಡರಂತಹವರು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದು ಬಿಜೆಪಿಯನ್ನು ಗೆಲ್ಲಿಸುವುದಕ್ಕಾಗಿಯೆ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೆ’ ಎಂದು ಟ್ವಿಟರ್‌ನಲ್ಲಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

‘ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಮತ್ತು ಅವರ ಸಹೋದರನನ್ನು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನಾಗಿ ಮಾಡಲಾಗಿತ್ತು. ಇದೆಲ್ಲವೂ ಬಿಜೆಪಿಯನ್ನು ಗೆಲ್ಲಿಸಲೆಂದು ಮಾಡಿದ್ದೇ? ಆಗ ಬಿಜೆಪಿಯನ್ನು ಗೆಲ್ಲಿಸುವುದಕ್ಕಾಗಿ ‘ಮುಸ್ಲಿಂ ಅಭ್ಯರ್ಥಿ’ಯನ್ನು ಗುರುತಿಸಿದ್ದರೆ ಈಗ ನನ್ನ ವಿರುದ್ಧ ಆರೋಪ ಮಾಡಲು ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ನ ತ್ಯಾಗಕ್ಕಾಗಿ ಕಿಂಚಿತ್ತೂ ಕೃತಜ್ಞತೆ ಉಳಿಯದಿದ್ದರೆ ಹೇಗೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.