ADVERTISEMENT

ದೇವಸ್ಥಾನದ ಪ್ರಸಾದಕ್ಕೆ ಪರವಾನಗಿ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2019, 19:13 IST
Last Updated 2 ಮಾರ್ಚ್ 2019, 19:13 IST

ಬೆಂಗಳೂರು: ‘ರಾಜ್ಯದಲ್ಲಿ ಇತ್ತೀಚಿಗೆ ಘಟಿಸಿದ ಪ್ರಸಾದಕ್ಕೆ ವಿಷ ಬೆರೆಸಿದ್ದ ಪ್ರಕರಣಗಳು ಅತ್ಯಂತ ವಿಷಾದನೀಯ. ಇನ್ನುಮುಂದೆ ಸಣ್ಣ, ಮಧ್ಯಮ ಹಾಗೂ ದೊಡ್ಡ ಮಟ್ಟದ ದೇವಸ್ಥಾನಗಳಿಗೆ ಪ್ರಸಾದ ಪೂರೈಸುವ ವ್ಯಾಪಾರಸ್ಥರು ಆರೋಗ್ಯ ಇಲಾಖೆಯಿಂದ ಪರವಾನಗಿ ಪಡೆಯುವುದು ಕಡ್ಡಾಯ’ ಎಂದುಆರೋಗ್ಯ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹಾಗೂ ರಾಜ್ಯದ ಹಲವು ಇಲಾಖೆಯ ಅಧಿಕಾರಿಗಳಿಗೆ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆ ಮತ್ತು ವಿತರಣೆ ಅಸಂಘಟಿತವಾಗಿದ್ದು, ಅದನ್ನು ನಿಯಮಗಳಿಗೆ ಒಳಪಡಿಸುವುದು ಕಷ್ಟಕರ. ಆದರೆ, ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಕಾನೂನು ಜಾರಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಧಾರವನ್ನು ಹಲವು ದೇವಸ್ಥಾನಗಳು ಸ್ವಾಗತಿಸಿವೆ’ ಎಂದು ತಿಳಿಸಿದರು.

ADVERTISEMENT

‘ಇಂಥ ಘಟನೆಗಳು ಮರುಕಳಿಸದಂತೆ ತಡೆಯುವಲ್ಲಿ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ. ಆರೋಗ್ಯ ಇಲಾಖೆಯಿಂದ ಪರವಾನಗಿ ಪಡೆದ ವ್ಯಕ್ತಿ ಹಾಗೂ ವ್ಯಾಪಾರಸ್ಥರಿಂದಲೇ ಸಾರ್ವಜನಿಕರು ಪ್ರಸಾದ ತಯಾರಿಸಿಕೊಳ್ಳಬೇಕು’ ಎಂದು ಹೇಳಿದರು.

ಕೇಂದ್ರ ಅಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಅಗರವಾಲ್, ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.