ಬೆಂಗಳೂರು: ಕೊರಗ ಸಮುದಾಯದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ಜಾರಿಗೊಳಿಸಿದ್ದ ‘ಆರೋಗ್ಯ ನಿಧಿ’ ಯೋಜನೆಯನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ವಿಧಾನಸಭೆಯಲ್ಲಿ ಬುಧವಾರ ಗಮನ ಸೆಳೆಯುವ ಸೂಚನೆ ಮಂಡಿಸಿದ ಬಿಜೆಪಿಯ ಕೆ. ರಘುಪತಿ ಭಟ್, ‘ಕೊರಗ ಸಮುದಾಯದ ಜನಸಂಖ್ಯೆ ಕ್ಷೀಣಿಸುತ್ತಿದೆ. ಅವರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಆರೋಗ್ಯ ನಿಧಿ ಯೋಜನೆ ಜಾರಿಯಲ್ಲಿತ್ತು. ಆದರೆ, ಪರಿಶಿಷ್ಟ ಪಂಗಡಗಳ ನಿರ್ದೇಶನಾಲಯವು ಯೋಜನೆಯನ್ನು ಸ್ಥಗಿತಗೊಳಿಸಿದೆ. ಇದರಿಂದ ಕೊರಗರಿಗೆ ಚಿಕಿತ್ಸೆ ಪಡೆಯುವುದು ಕಷ್ಟವಾಗುತ್ತಿದೆ’ ಎಂದು ಒತ್ತಾಯಿಸಿದರು.
ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್, ‘ಆರೋಗ್ಯದ ಸಮಸ್ಯೆಗಳಿಂದಾಗಿ ಕೊರಗ ಸಮುದಾಯದ ಜನರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ. ಮೂಲನಿವಾಸಿಗಳಾದ ಈ ಸಮುದಾಯವನ್ನು ಉಳಿಸಿಕೊಳ್ಳುವುದು ಸರ್ಕಾರದ ಹೊಣೆ’ ಎಂದರು.
‘ಕೊರಗರ ಆರೋಗ್ಯ ನಿಧಿ ಯೋಜನೆ ಸ್ಥಗಿತಗೊಳಿಸುವ ತೀರ್ಮಾನ ಆಗಿರುವುದು ನಿಜ. ಆದರೆ, ಅದನ್ನು ಮುಂದುವರಿಸಲಾಗುವುದು’ ಎಂದು ಬೊಮ್ಮಾಯಿ ಪ್ರಕಟಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.