ADVERTISEMENT

ಹೃದಯಾಘಾತ | ವರದಿಗೆ 10 ದಿನ ಗಡುವು: ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 15:59 IST
Last Updated 1 ಜುಲೈ 2025, 15:59 IST
<div class="paragraphs"><p>ದಿನೇಶ್ ಗುಂಡೂರಾವ್</p></div>

ದಿನೇಶ್ ಗುಂಡೂರಾವ್

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ 10 ದಿನಗಳಲ್ಲಿ ವರದಿ ನೀಡುವಂತೆ ತಜ್ಞರ ಸಮಿತಿಗೆ ಸೂಚಿಸಲಾಗಿದೆ. ಈ ವರದಿ ಆಧರಿಸಿ ಹೃದಯಾಘಾತ ತಡೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 

ADVERTISEMENT

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಠಾತ್ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಕೋವಿಡ್ ಹಾಗೂ ಲಸಿಕೆಯ ಅಡ್ಡ ಪರಿಣಾಮದ ಬಗ್ಗೆ ಅಧ್ಯಯನ ನಡೆಸಲು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈ ಹಿಂದೆ ಸಮಿತಿ ರಚಿಸಲಾಗಿತ್ತು. ಹಾಸನದಲ್ಲಿ ವರದಿಯಾಗುತ್ತಿರುವ ಹೃದಯಾಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆಯೂ ಇದೇ ಸಮಿತಿಗೆ ಅಧ್ಯಯನ ನಡೆಸಲು ಸೂಚಿಸಲಾಗಿದೆ. ಹೃದಯಾಘಾತಕ್ಕೆ ಒಳಗಾದವರ ವಯಸ್ಸು, ವೈದ್ಯಕೀಯ ಇತಿಹಾಸ ಸೇರಿ ವಿವಿಧ ಅಂಶಗಳನ್ನು ಪರಿಗಣಿಸಿ ಸಮಿತಿ ಅಧ್ಯಯನ ಕೈಗೊಳ್ಳಲಿದೆ. ಈ ಅಧ್ಯಯನದ ಬಳಿಕ ನಿಖರ ಕಾರಣ ತಿಳಿಯಲಿದೆ’ ಎಂದು ಹೇಳಿದರು. 

‘ಬದಲಾದ ಜೀವನಶೈಲಿಯಿಂದ ಸಹಜವಾಗಿಯೇ ವಿವಿಧ ಕಾಯಿಲೆಗಳಿಂದ ಮೃತಪಡುವವರ ಸಂಖ್ಯೆ ಹೆಚ್ಚುತ್ತಿದೆ. ಜನರು ಉತ್ತಮ ಜೀವನಶೈಲಿ ಅಳವಡಿಸಿಕೊಂಡು, ಹೃದಯದ ಆರೋಗ್ಯಕ್ಕೆ ಆದ್ಯತೆ ನೀಡಬೇಕು’ ಎಂದು ತಿಳಿಸಿದರು. 

‘ಹೃದಯ ತಪಾಸಣೆ ಹಾಗೂ ಚಿಕಿತ್ಸೆಗೆ ಇಲಾಖೆಯು ಆದ್ಯತೆ ನೀಡಿದ್ದು, ‘ಸ್ಟೆಮಿ’ (ಹೃದಯ ಸ್ನಾಯುವಿನ ಸೋಂಕು ನಿವಾರಣೆ) ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗಿದೆ. ಹಾಸನದಲ್ಲಿ ಹೃದ್ರೋಗಕ್ಕೆ ಸಂಬಂಧಿಸಿದಂತೆ 2023ರ ಮಾರ್ಚ್‌ನಿಂದ 2025ರ ಮೇ ತಿಂಗಳ ಅವಧಿಯಲ್ಲಿ ಈ ಕಾರ್ಯಕ್ರಮದಡಿ 37,847 ಮಂದಿಗೆ ಇಸಿಜಿ ಮಾಡಲಾಗಿದೆ. 480 ಪ್ರಕರಣಗಳಲ್ಲಿ ಹೃದಯ ಸ್ನಾಯುವಿನ ಸೋಂಕು ದೃಢಪಟ್ಟಿದ್ದು, ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇವರಲ್ಲಿ 420 ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದು, 60 ಮಂದಿ ಮೃತಪಟ್ಟಿದ್ದಾರೆ’ ಎಂದು ಮಾಹಿತಿ ನೀಡಿದರು. 

‘ಹೃದಯಾಘಾತಕ್ಕೆ ಕೊರೊನಾ ಸೋಂಕು ಅಥವಾ ಕೋವಿಡ್ ಲಸಿಕೆ ಕಾರಣವೆಂದು ಹೇಳಲು ಪುರಾವೆಗಳಿಲ್ಲ. ಜಗತ್ತಿನಾದ್ಯಂತ ಲಸಿಕೆ ನೀಡಲಾಗಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಅಥವಾ ರಾಷ್ಟ್ರ ಮಟ್ಟದಲ್ಲಿ ಅಧ್ಯಯನ ನಡೆಯಬೇಕಿದೆ. ವಿಶ್ವ ಆರೋಗ್ಯ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನಂತಹ (ಐಸಿಎಂಆರ್) ಸಂಸ್ಥೆಗಳು ಅಧ್ಯಯನ ಕೈಗೊಳ್ಳಬೇಕು. ನಮ್ಮ ವ್ಯಾಪ್ತಿಯಲ್ಲಿ ಈ ಅಧ್ಯಯನ ಕಷ್ಟ. ಆದರೂ ಮುಖ್ಯಮಂತ್ರಿ ಅವರ ಸೂಚನೆ ಅನುಸಾರ ರಾಜ್ಯದಲ್ಲಿ ಅಧ್ಯಯನಕ್ಕೆ ಸಮಿತಿ ರಚಿಸಲಾಗಿದೆ’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.