ADVERTISEMENT

ರಾಜ್ಯದಲ್ಲಿ ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 19:31 IST
Last Updated 12 ಜುಲೈ 2021, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸೋಮವಾರ ಉತ್ತಮ ಮಳೆ ಆಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನದಿಗೆ ಬಿದ್ದಿದ್ದಾರೆ.

ಭಟ್ಕಳ ತಾಲ್ಲೂಕಿನ ಮುಂಡಳ್ಳಿಯಲ್ಲಿ ಶ್ರೀಧರ ದೇವಾಡಿಗ (40) ಎಂಬುವವರು ಕಾಲು ಜಾರಿ ನದಿಗೆ ಬಿದ್ದಿದ್ದಾರೆ. ಅವರ ರಕ್ಷಣೆಗೆ ಮೀನುಗಾರರು ಪ್ರಯತ್ನಿಸಿದರೂ ನದಿ ಉಕ್ಕಿ ಹರಿಯುತ್ತಿರುವ ಕಾರಣ ಸಾಧ್ಯವಾಗಲಿಲ್ಲ.

ಅಗ್ನಿ ಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜೋರು ಮಳೆಯಾಗಿದೆ. ಹುಬ್ಬಳ್ಳಿ– ಧಾರವಾಡ, ಬೆಳಗಾವಿ, ವಿಜಯಪುರದಲ್ಲಿ ಸಾಧಾರಣ ಮಳೆಯಾಗಿದೆ.

ADVERTISEMENT

ಉತ್ತಮ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 2.4 ಸೆಂ.ಮೀ. ಮಳೆ ದಾಖಲಾಗಿದೆ. ಮಳೆಯಿಂದ ಜಿಲ್ಲೆಯಲ್ಲಿ ಒಟ್ಟು 9 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ.

ಚಿಕ್ಕಮಗಳೂರು, ಗಿರಿ ಶ್ರೇಣಿ, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಎನ್‌.ಆರ್‌.ಪುರ. ಶೃಂಗೇರಿ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ.

ಜಲಾಶಯಗಳ ಒಳಹರಿವು ಹೆಚ್ಚಳ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳ ಒಳಹರಿವು ಹೆಚ್ಚಾಗಿದೆ.

ಹೊಸನಗರ, ತೀರ್ಥಹಳ್ಳಿ, ಸಾಗರ, ಭದ್ರಾವತಿ, ಶಿಕಾರಿಪುರ, ಸೊರಬದಲ್ಲಿ ಸೋಮವಾರ ಆಗಾಗ್ಗೆ ಜೋರಾಗಿ ಮಳೆ ಸುರಿಯಿತು. ಲಿಂಗನಮಕ್ಕಿ ಜಲಾಯಶಕ್ಕೆ 7,083 ಕ್ಯುಸೆಕ್‌, ಭದ್ರಾ ಜಲಾಶಯಕ್ಕೆ 3,339 ಕ್ಯುಸೆಕ್‌, ತುಂಗಾ ಜಲಾಶಯಕ್ಕೆ 4,842 ಕ್ಯುಸೆಕ್‌ ನೀರು ಹರಿದುಬರುತ್ತಿದೆ.

ಕಲಬುರ್ಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗಿದೆ. ಜಿಲ್ಲೆಯ ಕಾಗಿಣಾ ಮತ್ತು ಕಮಲಾವತಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಮಲಾಪುರ ತಾಲ್ಲೂಕಿನ ಬೆಣ್ಣೆತೊರಾ, ಗಂಡೋರಿ ನಾಲಾ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ರಾಯಚೂರು, ಯಾದಗಿರಿ ಜಿಲ್ಲೆಗಳ ವಿವಿಧೆಡೆ ತುಂತುರು ಮಳೆ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.