ಬೆಂಗಳೂರು: ‘ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರ ಒದಗಿಸಲು ತಕ್ಷಣ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಮಳೆ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಅವರು ಸೋಮವಾರ ವಿಡಿಯೊ ಸಂವಾದ ನಡೆಸಿದರು.
ಮನೆ ಹಾನಿ ಆದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆ ಒದಗಿಸಲು ಕ್ರಮ ಕೈಗೊಳ್ಳಬೇಕು. ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗ ಈ ಸಮೀಕ್ಷೆ ಪೂರ್ಣಗೊಳಿಸಬೇಕು’ ಎಂದು ಅವರು ನಿರ್ದೇಶನ ನೀಡಿದರು.
ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111 ಮಂದಿ ಮೃತಪಟ್ಟಿದ್ದಾರೆ. ಎಲ್ಲ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು ₹ 5.55 ಕೋಟಿ ಪರಿಹಾರ ನೀಡಲಾಗಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.
651 ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9,087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8,608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಈ ಅವಧಿಯಲ್ಲಿ ಒಟ್ಟು 766 ಜಾನುವಾರುಗಳು ಸಾವಿಗೀಡಾಗಿದ್ದು, ಒಟ್ಟು ₹ 1.52 ಕೋಟಿ ಪರಿಹಾರ ವಿತರಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇಕಡಾ 4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ 23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು. ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ 24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ 20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ.
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಗುರಿ 82.50 ಲಕ್ಷ ಹೆಕ್ಟೇರ್ ಇದ್ದು, 80.76 ಲಕ್ಷ ಹೆಕ್ಟೇರ್ (ಶೇ 98) ಪ್ರದೆಶದಲ್ಲಿ ಬಿತ್ತನೆ ಪೂರ್ಣಗೊಂಡಿದೆ. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 4,80,256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 4,04,07 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 5,20,663 ಹೆಕ್ಟೇರ್ ಬೆಳೆ ಹಾನಿಯಾಗಿದೆ.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ 895.62 ಟಿಎಂಸಿ ಅಡಿ ಇದ್ದು, ಪ್ರಸ್ತುತ 840.52 ಟಿಎಂಸಿ ಅಡಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ ಅಡಿ ಸಂಗ್ರಹ ಇತ್ತು ಎಂದೂ ಅಧಿಕಾರಿಗಳು ಮಾಹಿತಿ ನೀಡಿದರು.
ಎರಡನೇ ಬೆಳೆಗೆ ನೀರು ಹರಿಸಲು ಸಾಧ್ಯ ಇಲ್ಲ: ‘ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಕರೆಯಲಾಗಿದೆ. ಎಂಟು ಕ್ರೆಸ್ಟ್ ಗೇಟ್ಗಳು ಅಳವಡಿಕೆಗೆ ಸಿದ್ಧವಿದೆ. ಕ್ರೆಸ್ಟ್ ಗೇಟ್ ಬದಲಾವಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ’ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
‘ತುಂಗಾ ಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು’ ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.