ADVERTISEMENT

ರಾಜ್ಯದ ಹಲವೆಡೆ ಧಾರಾಕಾರ ಮಳೆ: ಶಾಲಾ- ಕಾಲೇಜುಗಳಿಗೆ ರಜೆ 

​ಪ್ರಜಾವಾಣಿ ವಾರ್ತೆ
Published 7 ಜುಲೈ 2018, 6:48 IST
Last Updated 7 ಜುಲೈ 2018, 6:48 IST
   

ಮಡಿಕೇರಿ/ಮಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ.

ಕೊಡಗಿನ ಎಲ್ಲ ಶಾಲಾ- ಕಾಲೇಜುಗಳಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಪುತ್ತೂರು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ.

ಪುತ್ತೂರಿನ ಹೆಬ್ಬಾರಬೈಲ್ ಎಂಬಲ್ಲಿ ಮನೆ ಸಮೀಪದ ಗುಡ್ಡ ಕುಸಿದು ಅಜ್ಜಿ. ಮೊಮ್ಮಗ ಸಾವಿಗೀಡಾಗಿದ್ದಾರೆ.

ADVERTISEMENT

ನಾಪೋಕ್ಲು, ಭಾಗಮಂಡಲ ಹಾಗೂ ತಲಕಾವೇರಿ ವ್ಯಾಪ್ತಿಯಲ್ಲಿ ವಿಪರೀತ ಮಳೆ ಆಗುತ್ತಿದೆ. ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸುಂಟಿಕೊಪ್ಪ‌ ವ್ಯಾಪ್ತಿಯಲ್ಲಿ ಗಾಳಿ, ಮಳೆಗೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು ಹಲವು ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದೆ.


(ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ)

ವಾಹನ ಸಂಚಾರಕ್ಕೆ ಅಡ್ಡಿ
ಉಡುಪಿ:
ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿವೆ.

ಇಲ್ಲಿನ ಕರಾವಳಿ ಜಂಕ್ಷನ್‌ನಲ್ಲಿ ಮಳೆನೀರು ತುಂಬಿಕೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡದಿದ್ದರೂ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವಂತೆ ಶಾಲೆಗಳಿಗೆ ಸೂಚನೆ ನೀಡಿದ್ದು, ಹೆಚ್ಚಿನ ಶಾಲೆಗಳಿಗೆ ರಜೆ ನೀಡಲಾಗಿದೆ.

(ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ತುಂಗಾ ನದಿ ಮೈದುಂಬಿಕೊಂಡು ಹರಿಯುತ್ತಿದೆ)

ಮೂರು ದಿನ ಮಳೆ ಮುನ್ಸೂಚನೆ
ಕಾರವಾರ:
ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ನಿನ್ನೆಯಿಂದ ಉತ್ತಮ ಮಳೆಯಾಗುತ್ತಿದೆ. ಶನಿವಾರ ಬೆಳಿಗ್ಗೆಯಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಭಟ್ಕಳ, ಹೊನ್ನಾವರ ಭಾಗದಲ್ಲಿ ಆಗಾಗ ರಭಸದ ಗಾಳಿಯೂ ಬೀಸುತ್ತಿದೆ. ಶಿರಸಿ, ಸಿದ್ದಾಪುರ ಸೇರಿದಂತೆ ಮಲೆನಾಡು ಭಾಗದಲ್ಲೂ ಪುನರ್ವಸುನಕ್ಷತ್ರದ ಮಳೆಯು ನಿನ್ನೆಯಿಂದ ಅಬ್ಬರಿಸುತ್ತಿದೆ. ರಾಜ್ಯ ಮತ್ತು ಗೋವಾ ಕರಾವಳಿಯಲ್ಲಿ ಇನ್ನೂ ಮೂರು ದಿನ ಇದೇ ರೀತಿಯ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

(ಬಂಟ್ವಾಳ ಸಮಪದ ತುಂಬೆ ಕಿಂಡಿ ಅಣೆಕಟ್ಟೆ ಬಳಿ ಭಾರಿ ಮಳೆಗೆ ನದಿ ದಂಡೆ ಕುಸಿದಿದೆ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.