ADVERTISEMENT

ಉತ್ತರ ಕರ್ನಾಟಕದಾದ್ಯಂತ ಮಳೆ ಅಬ್ಬರ

ಹಲವೆಡೆ ಜಲಾವೃತಗೊಂಡ ಸೇತುವೆಗಳು l ಕುಸಿದ ಮನೆಗಳು l ದಿನಸಿ ನೀರು ಪಾಲು

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 4:26 IST
Last Updated 15 ಅಕ್ಟೋಬರ್ 2020, 4:26 IST
ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಮೋರಟಗಿಯ ಜನತಾ ಕಾಲೊನಿ ಜನರು ಸುರಕ್ಷಿತ ಸ್ಥಳಗಳತ್ತ ತೆರಳಿದರು (ಎಡಚಿತ್ರ) ಕಲಬುರ್ಗಿ ಜಿಲ್ಲೆ ಚಿಂಚೋಳಿಯ ಚಂದಾಪುರ ಹನುಮಾನ ನಗರದಲ್ಲಿ ಪ್ರವಾಹದ ನೀರು ನುಗ್ಗಿದ್ದರಿಂದ ಮನೆಯಲ್ಲಿ ಸಿಲುಕಿದ ಬಾಲಕನನ್ನು ಪೊಲೀಸರು ಬುಧವಾರ ರಕ್ಷಿಸಿದರು – ಪ್ರಜಾವಾಣಿ ಚಿತ್ರಗಳು
ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಮೋರಟಗಿಯ ಜನತಾ ಕಾಲೊನಿ ಜನರು ಸುರಕ್ಷಿತ ಸ್ಥಳಗಳತ್ತ ತೆರಳಿದರು (ಎಡಚಿತ್ರ) ಕಲಬುರ್ಗಿ ಜಿಲ್ಲೆ ಚಿಂಚೋಳಿಯ ಚಂದಾಪುರ ಹನುಮಾನ ನಗರದಲ್ಲಿ ಪ್ರವಾಹದ ನೀರು ನುಗ್ಗಿದ್ದರಿಂದ ಮನೆಯಲ್ಲಿ ಸಿಲುಕಿದ ಬಾಲಕನನ್ನು ಪೊಲೀಸರು ಬುಧವಾರ ರಕ್ಷಿಸಿದರು – ಪ್ರಜಾವಾಣಿ ಚಿತ್ರಗಳು   

ಹುಬ್ಬಳ್ಳಿ: ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಬುಧವಾರವೂ ಮಳೆಯ ರೌದ್ರ ನರ್ತನ ಮುಂದುವರಿದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದೆ. ವಿಜಯಪುರದಲ್ಲಿ ಡೋಣಿ ನದಿ ಉಕ್ಕಿ ಹರಿಯುತ್ತಿದೆ.

ಸತತ ಮಳೆಯಿಂದಾಗಿ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮಾಡಲಗೇರಿ ಗ್ರಾಮದ ಮನೆಯೊಂದರ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ.

ಗದಗ ಜಿಲ್ಲೆಯಾದ್ಯಂತ ಜೋರಾಗಿ ಮಳೆಯಾಗಿದೆ. ಕೊಣ್ಣೂರ ಬಳಿ ಹಳೆಯ ಮಲಪ್ರಭಾ ಸೇತುವೆ ಮುಳುಗಡೆಯಾಗಿದೆ. ಸುರಕೋಡ, ಕುರ್ಲಗೇರಿ ಬಳಿ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿವೆ. ನರಗುಂದ ಕಣಕಿಕೊಪ್ಪ ಮಧ್ಯೆ ಹಿರೇಹಳ್ಳ ಸೇತುವೆ ಕೊಚ್ಚಿ ಕೊಂಡು ಹೋಗಿ, ಸಂಚಾರ ಸ್ಥಗಿತಗೊಂಡಿದೆ.

ADVERTISEMENT

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಸಾರವಾಡ ಗ್ರಾಮದ ಮಲ್ಲಪ್ಪನ ಕೆರೆ ಏರಿ ಒಡೆದು, ಅಪಾರ ಪ್ರಮಾಣದ ನೀರು ಪೋಲಾಗಿದೆ. ಅಕ್ಕಪಕ್ಕದ ಜಮೀನುಗಳು ಜಲಾವೃತವಾಗಿದೆ. ಸಿಂದಗಿ ಮೋರಟಗಿ ಜನತಾ ಕಾಲೊನಿಯಲ್ಲಿ ಮನೆಗಳಿಗೆ ಮಂಗಳವಾರ ರಾತ್ರಿ ನೀರು ನುಗ್ಗಿದೆ. 25ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಅಕ್ಕಿ, ಗೋಧಿ, ದಿನಸಿಗಳೆಲ್ಲ ನೀರು ಪಾಲಾಗಿದೆ. ಅವರಿಗೆ ಈಗ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ.

ಡೋಣಿ ನದಿ ಪ್ರವಾಹದಿಂದ ತಾಳಿಕೋಟೆ– ಹಡಗಿನಾಳ ನೆಲಮಟ್ಟದ ಸೇತುವೆ ಮುಳುಗಿದೆ. ದೇವರ ಹಿಪ್ಪರಗಿ– ಬಸವನ ಬಾಗೇವಾಡಿ ಸಂಪರ್ಕ ರಸ್ತೆಯ ಸಾತಿಹಾಳ ಸಂಪರ್ಕ ಸೇತುವೆಯೂ ಮುಳುಗಿದೆ. ಜಿಲ್ಲೆಯ 10 ತಾಲ್ಲೂಕುಗಳನ್ನು ಅತಿವೃಷ್ಟಿ ಪೀಡಿತ ಘೋಷಿಸಲಾಗಿದೆ.

ಆಲಮಟ್ಟಿ ಜಲಾಶಯದ ಒಳಹರಿವು ಬುಧವಾರ ಸಂಜೆ 1.17 ಲಕ್ಷ ಕ್ಯುಸೆಕ್ ಗೆ ಹೆಚ್ಚಿದ್ದು, ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಬಿಡಲಾಗುತ್ತಿದೆ. ಸದ್ಯ ಪ್ರವಾಹದ ಯಾವುದೇ ಆತಂಕ ಇಲ್ಲ ಎಂದು ಕೆಬಿಜೆಎನ್ ಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಕಮಲಾಪುರ, ನವಲಗುಂದದ ಕೆಲಭಾಗಗಳಲ್ಲಿ ಮನೆಗಳು ಕುಸಿದಿವೆ. ನವಲಗುಂದ, ಅಣ್ಣಿಗೇರಿಯಲ್ಲಿ ಗೋವಿನ ಜೋಳ, ಹತ್ತಿ ಬೆಳೆ ನಾಶವಾಗಿದೆ. ಬೆಳಗಾವಿಯಲ್ಲೂ ಮಳೆ ಮುಂದುವರಿದಿದೆ. ಸವದತ್ತಿ ತಾಲ್ಲೂಕಿನ ಇನಾಮಹೊಂಗಲ ಬಳಿಯ ಧಾರವಾಡ ಸಂಪರ್ಕಿಸುವ ಸೇತುವೆ ಇನ್ನೂ ಜಲಾವೃತವಾಗಿಯೇ ಇದೆ. ಮೂಡಲಗಿ ತಾಲ್ಲೂಕಿನಲ್ಲಿ ಘಟಪ್ರಭಾ ನದಿಗೆ ನಿರ್ಮಿಸಿರುವ ಢವಳೇಶ್ವರ ಮತ್ತು ಅವರಾದಿಯ ಕೆಳಮಟ್ಟದ ಸೇತುವೆಗಳು ಜಲಾವೃತಗೊಂಡಿದ್ದು, ಕಳೆದ ನಾಲ್ಕು ದಿನಗಳಿಂದ ಸಂಚಾರ ಸ್ಥಗಿತಗೊಂಡಿದೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಎರಡು ಕಚ್ಚಾ ಮನೆಗಳು ಕುಸಿದಿವೆ. ಕಾರವಾರ ತಾಲ್ಲೂ
ಕಿನ ಅರಗಾದಲ್ಲಿ ರಾಷ್ಟ್ರೀಯ ಹೆದ್ದಾರಿ 66 ಜಲಾವೃತವಾದ ಕಾರಣ ವಾಹನ ಸಂಚಾರ ಅಸ್ತವ್ಯವಸ್ತಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.