ಡಿಕೆಶಿ
ಬೆಂಗಳೂರು: ಹೇಮಾವತಿ ಲಿಂಕ್ ಕೆನಾಲ್ ಮೂಲಕ ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲ ತಾಲ್ಲೂಕುಗಳಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಈ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿ ನಡೆಸಲು ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಪೈಪ್ ಲೈನ್ ಹಾಕಬೇಡಿ, ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಅವರು ಹೇಳುತ್ತಿದ್ದಾರೆ. ಪೈಪ್ಲೈನ್ ಹಾಕುವುದು ಸರ್ಕಾರದ ತೀರ್ಮಾನ’ ಎಂದರು.
‘ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರಿಂದ ಪರಿಶೀಲನೆ ನಡೆಸಲು ಕೇಂದ್ರ ಸಚಿವ ವಿ. ಸೋಮಣ್ಣ ಶಿಫಾರಸು ಮಾಡಿದ್ದಾರೆ. ಅದಕ್ಕೆ ಒಪ್ಪಿಗೆ ನೀಡಲಾಗಿದೆ. ಇಡೀ ತುಮಕೂರು ಜಿಲ್ಲೆಯ ಯಾರಿಗೂ ಅನ್ಯಾಯ ಆಗದ ರೀತಿಯಲ್ಲಿ ನೀರು ಹಂಚಲಾಗುವುದು’ ಎಂದರು.
‘ಹಿಂದೆ ನಮ್ಮ ಸರ್ಕಾರ ಇದ್ದಾಗ ಈ ಯೋಜನೆಯನ್ನು ಆರಂಭಿಸಿ ಕಾಮಗಾರಿ ನಡೆಸಿದ್ದೆವು. ಬಿಜೆಪಿ ಸರ್ಕಾರ ಅದನ್ನು ಸ್ಥಗಿತಗೊಳಿಸಿತ್ತು. ನನ್ನ ಕ್ಷೇತ್ರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜು ವಾಪಸ್ ಪಡೆದರು. ನಂತರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದರು. ಅದೆಲ್ಲವೂ ಸರ್ಕಾರದ ತೀರ್ಮಾನ. ವೈದ್ಯಕೀಯ ಕಾಲೇಜು ನಿರ್ಮಾಣದ ಯೋಜನೆ ₹ 600 ಕೋಟಿಯಿಂದ ₹ 900 ಕೋಟಿಗೆ ಏರಿಕೆಯಾಗಿದೆ. ಇದಕ್ಕೆ ಜವಾಬ್ದಾರಿ ಯಾರು’ ಎಂದು ಶಿವಕುಮಾರ್ ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.