ನವದೆಹಲಿ: ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಳ್ಳಲು ಗುರುವಾರ ಇಲ್ಲಿಗೆ ಬಂದಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಂಜೆ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಪಕ್ಷದ ಆಂತರಿಕ ವಿಷಯಗಳ ಕುರಿತು ಚರ್ಚಿಸಿದರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕನ ನೇಮಕ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆ ಕುರಿತು ಪಕ್ಷವು ಚಿಂತನೆ ನಡೆಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಾದ ಅಹಮದ್ ಪಟೇಲ್ ಹಾಗೂ ಎ.ಕೆ. ಆಂಟನಿ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿದರು.
ಸೋನಿಯಾ ಅವರನ್ನು ಶುಕ್ರವಾರ ಭೇಟಿ ಮಾಡಿ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ನೇಮಕ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆ ಕುರಿತು ಚರ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.
ವಿರೋಧ ಪಕ್ಷದ ನಾಯಕನ ಸ್ಥಾನದ ಮೇಲೆ ಸಿದ್ದರಾಮಯ್ಯ ಕಣ್ಣಿಟ್ಟಿದ್ದಾರೆ. ಅವರನ್ನು ಪರಿಗಣಿಸದಿದ್ದರೆ ಆಪ್ತರಾದ ಕೃಷ್ಣ ಬೈರೇಗೌಡ ಅಥವಾ ಕೆ.ಆರ್. ರಮೇಶಕುಮಾರ್ ಅವರನ್ನು ನೇಮಿಸುವಂತೆ ಕೋರಲಾಗಿದೆ. ಹಿರಿಯ ಮುಖಂಡ ಎಚ್.ಕೆ. ಪಾಟೀಲ ಅವರ ನೇಮಕಕ್ಕೆ ಇನ್ನೊಂದು ಬಣ ಆಗ್ರಹಿಸಿದೆ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.