ಬೆಂಗಳೂರು:ಲಂಚ ಕೊಡಲಿಲ್ಲ ಎಂಬ ಕಾರಣಕ್ಕೆ ಶಸ್ತ್ರಚಿಕಿತ್ಸೆ ವಿಷಯದ ಪ್ರಾಯೋಗಿಕ ಪರೀಕ್ಷೆಯಲ್ಲಿ ಕಲಬುರ್ಗಿಯ ಖ್ಜಾಜಾ ಬಂದೇ ನವಾಜ್ ವೈದ್ಯಕೀಯ ವಿಜ್ಞಾನಗಳ ಕಾಲೇಜಿನ ಏಳು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಿದ ಆರೋಪಕ್ಕೆ ಸಂಬಂಧಿಸಿದ ವಿಚಾರಣಾ ವರದಿಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಕುರಿತು ವಿನೋದಿನಿ ಸೇರಿದಂತೆ 7 ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
‘ಹೊಸದಾಗಿ ಸಮಿತಿ ರಚಿಸಬೇಕು. ಇದರಲ್ಲಿ ಬೇರೆ ಕಾಲೇಜಿನ ಪ್ರಾಧ್ಯಾಪಕರು ಇರಬೇಕು. ಈ ಸಮಿತಿ ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು. ಸಮಿತಿ ರಚನೆ ಹಾಗೂ ವಿಚಾರಣಾ ವರದಿ ಸಲ್ಲಿಸುವ ಪ್ರಕ್ರಿಯೆ 15 ದಿನಗಳಲ್ಲಿ ಪೂರ್ಣ ಗೊಳಿಸಬೇಕು’ ಎಂದು ರಾಜೀವ್ ಗಾಂಧಿ ಆರೋಗ್ಯ ವಿವಿ ರಿಜಿಸ್ಟ್ರಾರ್ ಅವರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
‘ಪ್ರಕರಣದ ಕುರಿತಂತೆ ವಿಚಾರಣೆಗೆ ಆದೇಶಿಸಬೇಕು ಹಾಗೂ ಮತ್ತೆ ಪ್ರಾಯೋಗಿಕ ವಿಷಯ ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯಕ್ಕೆ ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು. ಅರ್ಜಿದಾರರ ಪರ ರಹಮತ್ ಉಲ್ಲಾ ಕೋತ್ವಾಲ್ ವಾದ ಮಂಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.