ಬೆಂಗಳೂರು: ಕೋವಿಡ್ ನಿಯಂತ್ರಿಸಲು ಮಾಸ್ಕ್ ಧರಿಸಬೇಕು ಮತ್ತು ವ್ಯಕ್ತಿಗತ ಅಂತರ ಕಾಪಾಡಬೇಕು ಎಂಬ ನಿಯಮ ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಿಸಿದ ಪ್ರಾಧಿಕಾರಗಳಿಗೆ ಹೊಸದಾಗಿ ಆದೇಶ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ನಿಯಮ ಉಲ್ಲಂಘನೆ ಪ್ರಕರಣಗಳ ಕುರಿತು ರಾಜ್ಯ ಸರ್ಕಾರ ಸಲ್ಲಿಸಿರುವ ವರದಿ ಗಮನಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಬಿಬಿಎಂಪಿ ಕೇವಲ 19,500 ಪ್ರಕರಣಗಳನ್ನು ದಾಖಲಿಸಿದೆ. ಇದು ತೀರಾ ಕಡಿಮೆ. ವಿಧಾನಸೌಧದ ಆವರಣದಲ್ಲೇ ಮಾಸ್ಕ್ ಧರಿಸದೆ ಓಡಾಡುವ ಅನೇಕರು ಕಂಡು ಬರುತ್ತಾರೆ’ ಎಂದು ಪೀಠ ಮೌಖಿಕವಾಗಿ ಹೇಳಿತು.
‘ದಿನಕ್ಕೆ 9 ಸಾವಿರ ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ನವದೆಹಲಿಯ ನಂತರ ಸ್ಥಾನವನ್ನು ಬೆಂಗಳೂರು ಪಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರ ವಿರುದ್ಧ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿಲ್ಲ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.
‘ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಟ ದರ್ಶನ್ ಮತ್ತು ಸಂಸದೆ ಶೋಭಾ ಕರಂದ್ಲಾಜೆ ನಿಯಮ ಉಲ್ಲಂಘಿಸಿರುವ ಪ್ರಕರಣದ ಸಂಬಂಧ ಉತ್ತಮವಾದ ವರದಿ ಸಲ್ಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಪೀಠ ಮತ್ತೆ ಸೂಚಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.