ಬೆಂಗಳೂರು: ಕಲಬುರ್ಗಿಯಲ್ಲಿ ಇಬ್ಬರು ಪೌರ ಕಾರ್ಮಿಕರು ಶೌಚಗುಂಡಿಯಲ್ಲಿ ಮೃತಪಟ್ಟ ಘಟನೆ ಸಂಬಂಧ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮಲ ಹೊರುವ ಪದ್ಧತಿ ನಿಷೇಧ ಕಾಯ್ದೆ ಅನುಷ್ಠಾನ ವೈಫಲ್ಯ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, 2020ರ ಡಿಸೆಂಬರ್ನಲ್ಲಿ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳ ಅನುಸರಣೆ ಕುರಿತು ಸರ್ಕಾರ ಸಲ್ಲಿಸಿದ್ದ ವರದಿ ಪರಿಶೀಲಿಸಿತು. ಎಲ್ಲಾ ನಿರ್ದೇಶನಗಳನ್ನೂ ಸರ್ಕಾರ ಪಾಲಿಸಿಲ್ಲ ಎಂದು ಅಭಿಪ್ರಾಯಪಟ್ಟಿತು.
‘ಆದೇಶ ಪಾಲನೆ ಆಗದಿರುವ ಕಾರಣ ಕಠಿಣ ಆದೇಶ ಹೊರಡಿಸುವ ಬದಲು ಅನುಸರಣೆ ಬಗ್ಗೆ ಹೊಸದಾಗಿ ಅಫಿಡವಿಟ್ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗುತ್ತಿದೆ’ ಎಂದು ತಿಳಿಸಿತು.
‘2021ರ ಜನವರಿ 28 ರಂದು ಕಲಬುರ್ಗಿಯಲ್ಲಿ ನಡೆದ ಘಟನೆ ಸಂಬಂಧ ಎಫ್ಐಆರ್ ದಾಖಲಿಸಿರುವುದನ್ನು ಬಿಟ್ಟು ಬೇರೆ ಏನು ಕ್ರಮ ಕೈಗೊಳ್ಳಲಾಗಿದೆ’ ಎಂಬುದನ್ನು ತಿಳಿಸುವಂತೆ ತಿಳಿಸಿದ ಪೀಠ, ಫೆ.10ಕ್ಕೆ ವಿಚಾರಣೆ ಮುಂದೂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.