ಬೆಂಗಳೂರು: ಕೋವಿಡ್ ಮೂರನೇ ಅಲೆ ಎದುರಿಸಲು ವಾಸ್ತವಿಕವಾಗಿ ಎಷ್ಟು ಪ್ರಮಾಣದ ಆಮ್ಲಜನಕದ ಅಗತ್ಯವಿದೆ ಎಂಬುದರ ಕುರಿತು ಅಂದಾಜು ಸಿದ್ಧಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿದೆ.
ತುರ್ತು ಪರಿಸ್ಥಿತಿ ಎದುರಿಸಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆಮ್ಲಜನಕವನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಲಾಗಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಪೀಠ ತಿಳಿಸಿತು.
ಖಾಸಗಿ ಆಸ್ಪತ್ರೆಗಳಲ್ಲಿ 4,709 ಟನ್ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ 147.4 ಟನ್ ಆಮ್ಲಜನಕ ಹೆಚ್ಚುವರಿಯಾಗಿ ದಾಸ್ತಾನಿದೆ ಎಂದು ಸರ್ಕಾರ ವಿವರ ಸಲ್ಲಿಸಿತು. ‘ದಿನಕ್ಕೆ 1,200 ಟನ್ ಆಮ್ಲಜನಕ ಬೇಕಾಗಲಿದೆ ಎಂದು ತಜ್ಞರ ಸಮಿತಿ ವರದಿ ನೀಡಿದೆ. ದಾಸ್ತಾನಿರುವ ಆಮ್ಲಜನಕ ಸಾಕಾಗಲಿದೆಯೇ’ ಎಂದು ಪೀಠ ಪ್ರಶ್ನಿಸಿತು.
2021ರ ಆಗಸ್ಟ್ 23ರ ವೇಳೆಗೆ 3.69 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. 4.97 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಸದ್ಯ 2.83 ಕೋಟಿ ಜನ ಮೊದಲ ಡೋಸ್ ಪಡೆದಿದ್ದರೆ, 86.46 ಲಕ್ಷ ಜನ ಎರಡನೇ ಡೋಸ್ ಪಡೆದಿದ್ದಾರೆ ಎಂದು ಸರ್ಕಾರ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ವಿವರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.