ADVERTISEMENT

ಕೋವಿಡ್ : ದೂರು ಸಲ್ಲಿಕೆಗೆ ಹೊಸ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 20:27 IST
Last Updated 4 ಜೂನ್ 2021, 20:27 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ಕೋವಿಡ್‌ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ದೂರುಗಳನ್ನು ದಾಖಲಿಸಲು ಹೊಸ ವ್ಯವಸ್ಥೆಯೊಂದನ್ನು ರೂಪಿಸಲಾಗಿದೆ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ವಾಟ್ಸ್‌ಆ್ಯಪ್ ಮತ್ತು ಟೆಲಿಗ್ರಾಮ್ ರೀತಿಯ ಆ್ಯಪ್‌ಗಳ ಮೂಲಕವೂ ದೂರು ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿತು.

ಕೋವಿಡ್‌ ನಿಯಮ ಉಲ್ಲಂಘನೆಗಳ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.ಹೊಸ ವ್ಯವಸ್ಥೆ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು’ ಎಂದು ಆದೇಶಿಸಿತು.

ADVERTISEMENT

‘ದೂರುಗಳನ್ನು ಸ್ವೀಕರಿಸಿ ಪರಿಹರಿಸಲು ವ್ಯವಸ್ಥೆಯನ್ನು ರೂಪಿಸಿ ಜೂ.2ರಂದು ಅಧಿಸೂಚನೆ ಹೊರಡಿಸಲಾಗಿದೆ’ ಎಂದು ಸರ್ಕಾರ ವಿವರಿಸಿತು.

‘ನಮ್ಮ ಮೆಟ್ರೊ ಕೆಂಗೇರಿ ಮಾರ್ಗದ ತಪಾಸಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಜತೆ ಇದ್ದ ಸಚಿವರಾದ ಆರ್.ಅಶೋಕ, ಬಸವರಾಜ ಬೊಮ್ಮಾಯಿ ಮತ್ತು ವಿ. ಸೋಮಣ್ಣ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಹೊಸಕೊಟೆಯಲ್ಲಿ ಸಚಿವ ಎಂ.ಟಿ.ಬಿ. ನಾಗರಾಜ್ ಭಾಗವಹಿಸಿದ್ದ ಕಾರ್ಯಕ್ರಮ, ಬೆಳಗಾವಿ ಶಾಸಕ ಅಭಯ ಪಾಟೀಲ ಭಾಗವಹಿಸಿದ್ದ ಮತ್ತೊಂದು ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲೂ ನಿಯಮ ಪಾಲನೆಯಾಗಿಲ್ಲ’ ಎಂದು ವಕೀಲರಾದ ಗೀತಾ ಮಿಶ್ರಾ ಅರ್ಜಿ ಸಲ್ಲಿಸಿದ್ದರು.

‘ಕೋವಿಡ್‌ ನಿಯಮ ಉಲ್ಲಂಘನೆ ಬಗ್ಗೆ ದೂರು ಸಲ್ಲಿಸಲು ಸರ್ಕಾರ ಹೊಸದಾಗಿ ರಚಿಸಿರುವ ಪ್ರಾಧಿಕಾರದ ಮುಂದೆ ಮನವಿ ಸಲ್ಲಿಸಬೇಕು. ಹೊಸ ವ್ಯವಸ್ಥೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಲು ಸಹಾಯವಾಗಲಿದೆ’ ಎಂದು ಪೀಠ ತಿಳಿಸಿತು. ವಿಚಾರಣೆಯನ್ನು ಜೂ.10ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.