ಬೆಂಗಳೂರು: ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ತಾಯಿ ಹೆಸರಿನಲ್ಲಿ ಸರ್ಕಾರಿ ಜಮೀನು ಕಬಳಿಸಲು ನಕಲಿ ದಾಖಲೆ ಸೃಷ್ಟಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಯೊಬ್ಬರ ವಿರುದ್ಧ ಪ್ರಾಸಿಕ್ಯೂಷನ್ ಪೂರ್ವಾನುಮತಿ ಪಡೆಯಲು ವಿಳಂಬ ಮಾಡಿದ ರಾಜ್ಯ ಸರ್ಕಾರಕ್ಕೆ ₹1 ಲಕ್ಷ ದಂಡ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಬಿ. ಗಂಗಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ನಿವೃತ್ತ ಮುಖ್ಯ ಕಾರ್ಯದರ್ಶಿ ಸರ್ಕಾರದ 66 ಎಕರೆ ಕಬಳಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. 2016ರಲ್ಲೇ ದೂರು ದಾಖಲಾಗಿದ್ದರೂ ಕಠಿಣ ಕ್ರಮ ಕೈಗೊಂಡಿಲ್ಲ.ಇದು ಸರ್ಕಾರದ ಜಡತ್ವಕ್ಕೆ ಸಾಕ್ಷಿ’ ಎಂದು ಕಿಡಿ ಕಾರಿದೆ.
‘ದಂಡದ ಮೊತ್ತವನ್ನುಒಂದು ವಾರದೊಳಗೆ ಠೇವಣಿ ಇಡಬೇಕು. ಪೂರ್ವಾನುಮತಿಗೆ ಕಡತಗಳನ್ನು ಕೇಂದ್ರಕ್ಕೆ ರವಾನಿಸದ ಅಧಿಕಾರಿಗಳಿಂದ ಹಣ ವಸೂಲಿ ಮಾಡಬೇಕು‘ ಎಂದು ಎಚ್ಚರಿಸಿದೆ. ಅರ್ಜಿದಾರರ ಪರ ಎ.ವಿ.ನಿಶಾಂತ್ ವಾದ ಮಂಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.