ADVERTISEMENT

ಗೌರಿ ಹತ್ಯೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 20:30 IST
Last Updated 11 ಫೆಬ್ರುವರಿ 2019, 20:30 IST
ಗೌರಿ ಲಂಕೇಶ್
ಗೌರಿ ಲಂಕೇಶ್   

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಎನ್‌.ಮೋಹನ್ ನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಜಾ ಮಾಡಿ ಆದೇಶಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಸಂಪಾಜೆ ನಿವಾಸಿಯಾದ ಎನ್‌.ಮೋಹನ್‌ ನಾಯಕ್‌ಗೆ ಈ ಮೊದಲು ವಿಚಾರಣಾ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು.

ADVERTISEMENT

ವಿಚಾರಣೆ ವೇಳೆ ರಾಜ್ಯ ಪ್ರಾಸಿಕ್ಯೂಟರ್‌ ಎಚ್‌.ಎಸ್‌.ಚಂದ್ರಮೌಳಿ ವಾದ ಮಂಡಿಸಿ, ‘ಪ್ರಕರಣದಲ್ಲಿ ತನಿಖಾ ತಂಡವು ಆಧುನಿಕ ತಂತ್ರಜ್ಞಾನ ಬಳಸಿ ಆರೋಪಿ ಕೃತ್ಯದಲ್ಲಿ ಸಹಕರಿಸಿರುವ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ’ ಎಂದು ವಿವರಿಸಿದ್ದರು.

‘ಗೌರಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಕುಂಬಳಗೋಡಿನಲ್ಲಿ ಬಾಡಿಗೆ ಮನೆ ಮಾಡಿ ಆಶ್ರಯ ನೀಡಿದ್ದ ಆರೋಪವನ್ನು ಮೋಹನ್ ನಾಯಕ್ ಎದುರಿಸುತ್ತಿದ್ದಾರೆ. ಈಗಾಗಲೇ ಆತ ಪ್ರಾಸಿಕ್ಯೂಷನ್‌ ಸಾಕ್ಷಿಗಳನ್ನು ಬೆದರಿಸುವ ಪ್ರಯತ್ನ ಮಾಡಿದ್ದಾನೆ. ಆದ್ದರಿಂದ ಜಾಮೀನು ನೀಡಬಾರದು’ ಎಂದ ಮನವಿ ಮಾಡಿದ್ದರು.

ಆರೋಪಿ ವಿರುದ್ಧ ಕೋಕಾ ಕಾಯ್ದೆ, ಭಾರತೀಯ ದಂಡ ಸಂಹಿತೆಯ ಕಲಂ 302, 120 ಬಿ, ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ ಕಲಂ 3 ಮತ್ತು 25ರ ಅನುಸಾರ ಪ್ರಕರಣ ದಾಖಲಿಸಲಾಗಿದೆ.

2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಗೌರಿ ಲಂಕೇಶ್‌ ಹತ್ಯೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.