ಬೆಂಗಳೂರು: 2019ರ ಗೋಕಾಕ್ ಉಪಚುನಾವಣೆ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಗೋಕಾಕ್ನ ಪ್ರಧಾನ ಜೆಎಂಎಫ್ಸಿ ನ್ಯಾಯಾಲಯ ದಾಖಲಿಸಿಕೊಂಡಿದ್ದ ಸಂಜ್ಞೆಯ ಅಪರಾಧ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಉಪಚುನಾವಣೆ ಪ್ರಚಾರಕ್ಕೆ ತೆರಳಿದ್ದ ಬಿ.ಎಸ್. ಯಡಿಯೂರಪ್ಪ, ‘ವೀರಶೈವ ಲಿಂಗಾಯತ ಸಮುದಾಯದ ಮತದಾರರು ಒಮ್ಮತದಿಂದ ಮತ ಚಲಾಯಿಸಬೇಕು, ವಿಭಜನೆ ಆಗಬಾರದು’ ಎಂದು ಭಾಷಣ ಮಾಡಿದ್ದರು. ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ಫ್ಲೈಯಿಂಗ್ ಸ್ಕ್ವಾಡ್ ಆಗಿದ್ದ ಕರ್ನಾಟಕ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಲಕ್ಷ್ಮಣ್ ಅಲ್ಲಾಪುರ ದೂರು ನೀಡಿದ್ದರು.
ಈ ಪ್ರಕರಣದಲ್ಲಿ ಗೋಕಾಕ್ ಪೊಲೀಸರು ಸಲ್ಲಿಸಿದ್ದ ಬಿ ವರದಿ ತಿರಸ್ಕರಿಸಿದ್ದ ಜೆಎಂಎಫ್ಸಿ ನ್ಯಾಯಾಲಯ, ಸ್ವಯಂ ಪ್ರೇರಿತವಾಗಿ ಸಂಜ್ಞೆಯ ಅಪರಾಧ ಎಂದು ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ನೀಡಿತ್ತು.
‘ಯಾವುದೇ ಆಕ್ಷೇಪ ಇಲ್ಲದೆ ಮತ್ತುದೂರದಾರರ ಗಮನಕ್ಕೆ ತರದೆ ನ್ಯಾಯಾಲಯ ಬಿ ವರದಿ ತಿರಸ್ಕರಿಸಬಾರದು. ಜನಪ್ರತಿನಿಧಿ ಕಾಯ್ದೆ–1951ರ ಸೆಕ್ಷನ್ 123 ಅಡಿಯಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ವಿರುದ್ಧ ಮಾತ್ರ ಪ್ರಕರಣ ದಾಖಲಿಸಬಹುದು’ ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.