ADVERTISEMENT

ಕೆಎಸ್‌ಪಿಸಿಬಿ ಅಸಹಾಯಕತೆ: ಹೈಕೋರ್ಟ್ ಅಸಮಾಧಾನ

ಮಡಿಕೇರಿಯಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯುತ್ತಿರುವ ಸ್ಥಳೀಯ ಸಂಸ್ಥೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 3:31 IST
Last Updated 8 ಆಗಸ್ಟ್ 2020, 3:31 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಮಡಿಕೇರಿಯಲ್ಲಿಅವೈಜ್ಞಾನಿಕವಾಗಿ ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ(ಕೆಎಸ್‌ಪಿಸಿಬಿ) ಹೈಕೋರ್ಟ್ ನಿರ್ದೇಶನ ನೀಡಿದೆ.

ಪರಿಸರ ಸಂರಕ್ಷಣಾ ಕಾಯ್ದೆ ಮತ್ತು ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನುಸ್ಥಳೀಯ ಅಧಿಕಾರಿಗಳು ಉಲ್ಲಂಘಿಸಿದಾಗ ಕೆಎಸ್‌ಪಿಸಿಬಿ ಅಸಹಾಯಕತೆಯಿಂದವರ್ತಿಸಬಾರದು. ಅಧ್ಯಕ್ಷರ ಅಧಿಕಾರ ನಿರ್ವಹಿಸುತ್ತಿರುವವರೇ ಈ ಸಂಬಂಧ ಅಫಿಡವಿಟ್ ಸಲ್ಲಿಸಬೇಕು’ಎಂದು ಮುಖ್ಯ‌ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.

ಮಡಿಕೇರಿಯಸುಬ್ರಮಣ್ಯನಗರ,ವಿದ್ಯಾನಗರ, ಕನ್ನಿಕ ಲೇಔಟ್ ನಿವಾಸಿಗಳು ಮತ್ತುಎಸ್ಆರ್‌ವಿಕೆ ವೆಲ್‌ಫೇರ್ ಅಸೋಸಿಯೇಷನ್ ಸಲ್ಲಿಸದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ಆದೇಶ ನೀಡಿದೆ.

ADVERTISEMENT

‘ಮಡಿಕೇರಿಯ ಕರ್ಣಗೇರಿ ಸಮೀಪ ಅರಣ್ಯ ಇಲಾಖೆ ವಿರೋಧದ ನಡುವೆ ನಿಯಮ ಉಲ್ಲಂಘಿಸಿ ಕಸ ಸುರಿಯಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಸದ್ಯದ ಪರಿಸ್ಥಿತಿ ಪರಿಶೀಲಿಸಲು ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಮತ್ತು ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ವರದಿ ಸಲ್ಲಿಸುವಂತೆ ಕೆಎಸ್‌ಪಿಸಿಬಿಗೆ ಈ ಹಿಂದಿನ ವಿಚಾರಣೆ ವೇಳೆಯೇ ಪೀಠ ನಿರ್ದೇಶನ ನೀಡಿತ್ತು.

‘ಮಾಲಿನ್ಯ ನಿಯಂತ್ರಣ ಮಂಡಳಿ ಅಸಹಾಯಕತೆಯಿಂದ ವರ್ತಿಸುತ್ತಿರುವುದು ವಿಷಾದದ ಸಂಗತಿ. ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ವಿರುದ್ಧ ರಾಜ್ಯ ಸರ್ಕಾರವೇ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿ ವಿಚಾರಣೆಯನ್ನು ಆ.14ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.