ಬೆಂಗಳೂರು: ಕೊಡಗು ಜಿಲ್ಲೆಯ ಕುಶಾಲನಗರದ ಹೊರವಲಯದಲ್ಲಿರುವ ತಾವರೆಕೆರೆ ಜಾಗ ಒತ್ತುವರಿ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಮೈಸೂರು– ಮಂಗಳೂರು ರಸ್ತೆಯ ಬೈಚನಹಳ್ಳಿ ಗ್ರಾಮದಲ್ಲಿರುವ ತಾವರೆಕೆರೆ ಆವರಣ ಮತ್ತು ಸುತ್ತಮುತ್ತ ಅಕ್ರಮ ಕಟ್ಟಡಗಳು ತಲೆ ಎತ್ತಿವೆ. ಕೆರೆ ಪ್ರದೇಶ ಅತಿಕ್ರಮವಾಗಿರುವುದು ರಾಜಕಾಲುವೆಯಿಂದ ಕಾವೇರಿ ನದಿಗೆ ನೀರು ಹರಿದು ಹೋಗುವುದಕ್ಕೂ ಅಡ್ಡಿಯಾಗಿದೆ. ಮಳೆಗಾಲದಲ್ಲಿ ನೀರು ರಸ್ತೆ ಹರಿದು ಬರುವಂತಾಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.
ಒತ್ತುವರಿ ತೆರವಿಗೆ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.