ಪ್ರಜಾವಾಣಿ ವಾರ್ತೆ
ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್ಆರ್ಪಿ) ಸಹಾಯಕ ಕಮಾಂಡೆಂಟ್ (ಡಿವೈಎಸ್ಪಿ) ವೈಜನಾಥ್ ಕಲ್ಯಾಣಿ ರೇವೂರ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ ದಿವ್ಯಾ ಮತ್ತು ವೈಜನಾಥ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠವು ವಜಾಗೊಳಿಸಿ ಆದೇಶಿಸಿದೆ.
ದಿವ್ಯಾ ಹಾಗರಗಿ ಸೇರಿದಂತೆ ಐವರನ್ನು ಸಿಐಡಿ ಪೊಲೀಸರುಏಪ್ರಿಲ್ 29ರಂದು ಪುಣೆಯಲ್ಲಿ ಬಂಧಿಸಿದ್ದರು. ಮೇ 6ರಂದು ವೈಜನಾಥ್ ಅವರನ್ನು ಬಂಧಿಸಲಾಗಿತ್ತು. ವೈಜನಾಥ್, ಅಭ್ಯರ್ಥಿಗಳು ಅಕ್ರಮವಾಗಿ ಪರೀಕ್ಷೆ
ಯಲ್ಲಿ ಉತ್ತೀರ್ಣವಾಗಲು ನೆರವಾದ ಆರೋಪ ಎದುರಿಸುತ್ತಿದ್ದಾರೆ. ದಿವ್ಯಾ ಹಾಗರಗಿ ಪ್ರಕರಣದಲ್ಲಿ 18ನೇ ಆರೋಪಿಯಾಗಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 120 (ಬಿ), 465, 468, 471, 410ರ ಜೊತೆಗೆ 34ರ ಅಡಿಕಲಬುರಗಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ವೀರೇಶ ನಿಡಗುಂದಾ ಎಂಬ ಅಭ್ಯರ್ಥಿಯ ಬಂಧನದೊಂದಿಗೆ ಅಕ್ರಮ ಬಯಲಿಗೆ ಬಂದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.