ADVERTISEMENT

ಅವಧಿ ವಿಸ್ತರಣೆ ಕೋರಿದ್ದ ಮೇಲ್ಮನವಿ ವಜಾ

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 7:04 IST
Last Updated 7 ಜುಲೈ 2021, 7:04 IST

ಬೆಂಗಳೂರು: ಬೆಳಗಾವಿ ಜಿಲ್ಲೆಯ ಹಲವು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ತಮ್ಮ ಅಧಿಕಾರಾವಧಿ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

‘ಸದಸ್ಯರ ಮನವಿಯನ್ನು ರಾಜ್ಯ ಚುನಾವಣಾ ಆಯೋಗ ಅಥವಾ ರಾಜ್ಯ ಸರ್ಕಾರ ಪರಿಗಣಿಸಿದರೆ ಪ್ರಜಾಪ್ರಭುತ್ವದ ಮೂಲ ತತ್ವಕ್ಕೆ ಅಪವಾದ ಮಾಡಿದಂತಾಗಲಿದೆ’ ಎಂದು ಹೈಕೋರ್ಟ್ ಧಾರವಾಡ ಪೀಠ ಅಭಿಪ್ರಾಯಪಟ್ಟಿದೆ.

ಆಡಳಿತಾಧಿಕಾರಿ ನೇಮಕ ಮಾಡಿರುವ ಸರ್ಕಾರದ ಆದೇಶ ಬದಿಗಿರಿಸಿ ಸದಸ್ಯರ ಅವಧಿಯನ್ನೇ ವಿಸ್ತರಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 2021ರ ಜೂನ್ 24ರಂದು ಏಕ ಸದಸ್ಯ ಪೀಠ ತಿರಸ್ಕರಿಸಿತ್ತು. ಬಳಿಕ ಅವರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ADVERTISEMENT

ಕೋವಿಡ್ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಚುನಾವಣೆ ನಡೆಸದೇ ಆಡಳಿತಾಧಿಕಾರಿ ನೇಮಕ ಮಾಡುವುದಾದರೆ, ಚುನಾಯಿತ ಸದಸ್ಯರ ಅವಧಿಯನ್ನೇ ವಿಸ್ತರಿಸಬಹುದು ಎಂದು ಸದಸ್ಯರು ಕೋರಿದ್ದರು.

‘ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಚುನಾಯಿತರಾಗುವುದು 5 ವರ್ಷಗಳ ಅವಧಿಗೆ ಮಾತ್ರ. ಸಂವಿಧಾನದ 74ನೇ ತಿದ್ದುಪಡಿಯಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿದೆ. ಕೃಷ್ಣಸಿಂಗ್ ತೋಮರ್ ಪ್ರಕರಣದ ಆದೇಶದಲ್ಲಿ ಸುಪ್ರೀಂಕೋರ್ಟ್‌ ಕೂಡ ಈ ಬಗ್ಗೆ ಉಲ್ಲೇಖ ಮಾಡಿದೆ’ ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಪ್ರದೀಪ್‌ಸಿಂಗ್ ಯೆರುರ್ ಅವರಿದ್ದ ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.