ಹೈಕೋರ್ಟ್ ಧಾರವಾಡ ಪೀಠ
ಬೆಂಗಳೂರು: ‘ಕರ್ನಾಟಕ ಲೋಕಸೇವಾ ಆಯೋಗದಲ್ಲಿನ (ಕೆಪಿಎಸ್ಸಿ) ನೇಮಕಾತಿ ವಿಷಯಗಳಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಲ್ಲಿ ಎಷ್ಟು ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಮತ್ತು ವಹಿಸಲಾಗಿರುವ ಎಷ್ಟು ಪ್ರಕರಣಗಳಲ್ಲಿ ಸತ್ಯ ಹೊರಬಂದಿದೆ ಎಂಬ ಮಾಹಿತಿಯನ್ನು ಒದಗಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಸೋಮವಾರ ಆದೇಶಿಸಿದೆ.
ಎಂಜಿನಿಯರ್ಗಳ ನೇಮಕಾತಿಗೆ ಸಂಬಂಧಿಸಿದ ಪ್ರಕರಣದಲ್ಲಿ, ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಸ್ಎಟಿ) ಆದೇಶ ಪ್ರಶ್ನಿಸಿ ಎಂಜಿನಿಯರ್ಗಳಾದ ವಿಶ್ವಾಸ್ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ರಾಮಚಂದ್ರ ಡಿ. ಹುದ್ದಾರ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಆಯೋಗದ ನಿರ್ಣಯದ ಪ್ರಕಾರ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ. 10 ಮಂದಿ ಅರ್ಜಿದಾರರನ್ನು ನೇಮಕಾತಿಗೆ ಪರಿಗಣಿಸಬಾರದು ಎಂದು ಆಯೋಗದ ನಿರ್ಣಯದಲ್ಲಿ ಹೇಳಲಾಗಿತ್ತು. ಆದಾಗ್ಯೂ, ಅವರಿಗೆ ನೇಮಕಾತಿ ಪತ್ರ ಏಕೆ ನೀಡಲಾಗಿದೆ ಎಂಬುದಕ್ಕೆ ಸಮರ್ಥನೆ ಒದಗಿಸಲಾಗುವುದು’ ಎಂದರು.
ನ್ಯಾಯಪೀಠದ ನಿರ್ದಿಷ್ಟ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೆಪಿಎಸ್ಸಿ ಪರ ಹಾಜರಿದ್ದ ಪದಾಂಕಿತ ಹಿರಿಯ ವಕೀಲ ಪಿ.ಎಸ್.ರಾಜಗೋಪಾಲ ಮತ್ತು ಪ್ರಕಾಶ್ ಅವರು, ‘ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸುವ ಸಾಂವಿಧಾನಿಕ ಅಧಿಕಾರ ನ್ಯಾಯಪೀಠಕ್ಕೆ ಇದೆ’ ಎಂದರು.
‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ (ಆರ್ಡಿಪಿಆರ್) ಕುಡಿಯುವ ನೀರು ಪೂರೈಕೆ ವಿಭಾಗದ ಎಇಇ ನೇಮಕದಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಕೆಪಿಎಸ್ಸಿ ಮಾಡಿರುವ ಶಿಫಾರಸಿಗೆ ತಡೆ ನೀಡಬೇಕು’ ಎಂಬ ಅರ್ಜಿದಾರರ ಮನವಿಯನ್ನು ಕೆಎಸ್ಎಟಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.