ಕರ್ನಾಟಕ ಹೈಕೋರ್ಟ್
ಬೆಂಗಳೂರು: ‘ರಾಜ್ಯದ ಸರ್ಕಾರಿ ವೈದ್ಯಕೀಯ, ದಂತ ವೈದ್ಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 2020ರ ಬದಲಿಗೆ 2006ರಿಂದಲೇ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ಅನ್ವಯಿಸುವಂತೆ ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಡಾ.ಮೊಹಮ್ಮದ್ ಆರಿಫ್ ಸೇರಿದಂತೆ ಸಂಸ್ಥೆಯ 45 ಮಂದಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿಯಲ್ಲಿ ಏನಿದೆ?: ‘ರಾಜ್ಯ ಸರ್ಕಾರ 2006ರಿಂದ ಎನ್ಪಿಎಸ್ ಅನುಷ್ಠಾನಗೊಳಿಸಿದೆ. 2016ರಲ್ಲಿ ಯೋಜನೆಯನ್ನು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿನ ಸ್ವಾಯತ್ತ ಸಂಸ್ಥೆಗಳು, ನಿಗಮ, ಮಂಡಳಿ, ಸೊಸೈಟಿಗಳು, ವಿವಿಗಳ ನೌಕರಿಗೂ ವಿಸ್ತರಿಸಲಾಗಿತ್ತು. ಆದರೆ, 2020ರ ಆಗಸ್ಟ್ 27ರಂದು ಆದೇಶವೊಂದನ್ನು ಹೊರಡಿಸಿ, ಈ ಆದೇಶ ಹೊರಡಿಸಿದ ನಂತರದಿಂದ ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ಎನ್ಪಿಎಸ್ ಅನ್ವಯವಾಗಲಿದೆ ಎಂದು ಹೇಳಿದೆ. ಇದು ಕಾನೂನು ಬಾಹಿರ. ಹಾಗಾಗಿ, 2020ರಲ್ಲಿ ಹೊರಡಿಸಲಾಗಿರುವ ಈ ಆದೇಶ ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.