ಬೆಂಗಳೂರು: ‘ಹೈಕೋರ್ಟ್ ಕಲಾಪಗಳ ಪ್ರಕ್ರಿಯೆಯನ್ನು ಸಾಮಾಜಿಕ ಜಾಲತಾಣ, ವೈಯಕ್ತಿಕ ಖಾತೆಗಳಲ್ಲಿ ನೇರ ಪ್ರಸಾರ ಮಾಡುವುದು, ಸಂಕಲನ ಮಾಡುವುದು ಅಥವಾ ಮರು ಪ್ರಸಾರ ಮಾಡುವುದನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಬೆಂಗಳೂರು ವಕೀಲರ ಸಂಘ (ಎಎಬಿ) ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಈ ಕುರಿತ ರಿಟ್ ಅರ್ಜಿಯನ್ನು ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮತ್ತು ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ ಸೋಮವಾರ ದಾಖಲಿಸಿದ್ದು, ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ನ್ಯಾಯಪೀಠ, ಮಂಗಳವಾರ (ಸೆ.24) ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಪ್ರಕರಣದಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿಗಳು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್, ಡಿಜಿ–ಐಜಿಪಿ, ಯೂ–ಟ್ಯೂಬ್, ಮೆಟಾ (ಫೇಸ್ಬುಕ್), ಟ್ವಿಟರ್ ಕಮ್ಯುನಿಕೇಶನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಕಂಪನಿ, ಕಹಳೆ ನ್ಯೂಸ್, ಫ್ಯಾನ್ಸ್ ಟ್ರೋಲ್, ರವೀಂದ್ರ ಜೋಶಿ ಕ್ರಿಯೇಶನ್ಸ್ ಮತ್ತು ‘ಅವನಿಯಾನ’ದ ಅಧಿಕೃತ ಪ್ರತಿನಿಧಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
‘ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಮತ್ತು ವೈವಾಹಿಕ ಕಲಹಗಳು, ದಾಂಪತ್ಯ ವಿಚ್ಛೇದನಕ್ಕೆ ಸಂಬಂಧಿಸಿದ ಪ್ರಕರಣಗಳು ಅತ್ಯಂತ ಸೂಕ್ಷ್ವ ಮತ್ತು ಸಂವೇದನಾಶೀಲ ಸಂಗತಿಗಳಾಗಿರುತ್ತವೆ. ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಇಂತಹ ಪ್ರಕರಣಗಳನ್ನು ಮಾಧ್ಯಮಗಳ ಮುಖಾಂತರ ಬಿತ್ತರಗೊಳಿಸುವುದು ಕಕ್ಷಿದಾರರ ವೈಯಕ್ತಿಕ ಹಕ್ಕುಗಳ ಉಲ್ಲಂಘನೆ ಎಂದು ಸುಪ್ರೀಂ ಕೋರ್ಟ್ ಅನೇಕ ಬಾರಿ ಎಚ್ಚರಿಸಿದೆ. ಹಾಗಾಗಿ, ನೇರ ಪ್ರಸಾರದ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ಕಾನೂನುಬಾಹಿರ ಕೃತ್ಯ ಎಂದು ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಮಹಿಳೆಯರ ಮಕ್ಕಳ ವೈಯಕ್ತಿಕ ಹಕ್ಕುಗಳ ಉಲ್ಲಂಘನೆ
‘ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಮತ್ತು ವೈವಾಹಿಕ ಕಲಹಗಳು ದಾಂಪತ್ಯ ವಿಚ್ಛೇದನಕ್ಕೆ ಸಂಬಂಧಿಸಿದ ಪ್ರಕರಣಗಳು ಅತ್ಯಂತ ಸೂಕ್ಷ್ವ ಮತ್ತು ಸಂವೇದನಾಶೀಲ ಸಂಗತಿಗಳಾಗಿರುತ್ತವೆ. ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಇಂತಹ ಪ್ರಕರಣಗಳನ್ನು ಮಾಧ್ಯಮಗಳ ಮುಖಾಂತರ ಬಿತ್ತರಗೊಳಿಸುವುದು ಕಕ್ಷಿದಾರರ ವೈಯಕ್ತಿಕ ಹಕ್ಕುಗಳ ಉಲ್ಲಂಘನೆ ಎಂಬುದನ್ನು ಸುಪ್ರೀಂ ಕೋರ್ಟ್ ಅನೇಕ ಬಾರಿ ಎಚ್ಚರಿಸಿದೆ. ಹಾಗಾಗಿ ನೇರ ಪ್ರಸಾರದ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ಕಾನೂನು ಬಾಹಿರ ಕೃತ್ಯ ಎಂದು ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.