ADVERTISEMENT

ಹಿಜಾಬ್‌: ಮುಕರ‍್ರಮ್‌ ವಿರುದ್ಧ ಪ್ರಕರಣ ಕೈ ಬಿಡಲು ಹೈಕೋರ್ಟ್‌ ನಕಾರ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 14:32 IST
Last Updated 11 ಫೆಬ್ರುವರಿ 2026, 14:32 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದ್ದ ಸಂದರ್ಭದಲ್ಲಿ ‘ಹಿಂದೂಗಳನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆ’ ಎಂಬ ಹೇಳಿಕೆ ನೀಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಮುಕರ‍್ರಮ್‌ ಖಾನ್ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

‘ನನ್ನ ವಿರುದ್ಧದ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ವಕೀಲರೂ ಆದ ಮುಕರ‍್ರಮ್‌ ಖಾನ್‌ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ರಾಜೇಶ್‌ ರೈ ಅವರಿದ್ದ ಏಕಸದಸ್ಯ ನ್ಯಾಯಪೀಠ (ಕಲಬುರಗಿ) ಈ ಕುರಿತಂತೆ ಆದೇಶಿಸಿದೆ. ಇದೇ ವೇಳೆ ಮುಕರ‍್ರಮ್‌ ಖಾನ್‌ಗೆ ಆಶ್ರಯ ನೀಡಿ, ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಕರಿಸಿದ ಆರೋಪ ಎದುರಿಸುತ್ತಿದ್ದ ಅವರ ಪುತ್ರ ಡಾ.ಸೋಯಬ್ ಖಾನ್ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲಾಗಿದೆ.

‘ಹಿಂದೂಗಳನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಹೇಳುವ ಮೂಲಕ ಮುಕರ‍್ರಮ್‌ ಖಾನ್‌ ಉದ್ದೇಶಪೂರ್ವಕ ಹಾಗೂ ದುರುದ್ದೇಶಪೂರಿತ ಮನಃಸ್ಥಿತಿ ಪ್ರದರ್ಶಿಸಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ದೋಷಾರೋಪದ ಅಂಶಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಗಮನಿಸಿದರೆ ಆರೋಪ ವೇದ್ಯವಾಗುತ್ತದೆ. ಎರಡನೇ ಆರೋಪಿ ಸೋಯಬ್ ಖಾನ್ ಘಟನೆಯ ನಂತರ ಮುಕರ‍್ರಮ್‌, ಹೈದರಾಬಾದ್‌ಗೆ ಪರಾರಿಯಾಗಿದ್ದಾಗ ಅವರಿಗೆ ಆಶ್ರಯ ನೀಡಿ, ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಕರಿಸಿದ್ದರು ಎನ್ನಲಾಗಿದೆ. ಆದರೆ, ಈ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರ ಅಥವಾ ಸಾಕ್ಷಿ ಹೇಳಿಕೆಗಳಾಗಲಿ ಇಲ್ಲ’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.

ADVERTISEMENT

ಪ್ರಕರಣವೇನು?: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಅಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಈ ಸಂದರ್ಭದಲ್ಲಿ ಸೇಡಂನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಮುಕರ‍್ರಮ್‌ ಖಾನ್‌, ‘ಹಿಂದೂಗಳು ಹಿಜಾಬ್‌ ತಂಟೆಗೆ ಬಂದರೆ ತುಂಡು ತುಂಡಾಗಿ ಕತ್ತರಿಸುತ್ತೇನೆ ಎಂಬ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಶಂಕರ್, ಸೇಡಂ ಪೊಲೀಸ್ ಠಾಣೆಯಲ್ಲಿ 2022ರ ಫೆಬ್ರುವರಿ 17ರಂದು ದೂರು ‌ನೀಡಿದ್ದರು.

ದೂರಿನ ತನಿಖೆ ನಡೆಸಿದ್ದ ಪೊಲೀಸರು, ಮುಕರ‍್ರಮ್‌ ಖಾನ್‌ ವಿರುದ್ಧ, ಭಾರತೀಯ ದಂಡ ಸಂಹಿತೆ–1860ರ ಕಲಂ 298, 295, 212 ಮತ್ತು 34ರ ಅಡಿಯಲ್ಲಿ ಸೇಡಂ ಜೆಎಂಎಫ್‌ಸಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.