ಬೆಂಗಳೂರು: ‘ಮುಂದಿನ 15 ದಿನಗಳ ಒಳಗಾಗಿ ರಾಜ್ಯದ ಎಲ್ಲ ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಕಟ್ಟಿಸಿಕೊಳ್ಳುವ ಶುಲ್ಕದ ವಿವರ ಒಳಗೊಂಡ ಫಲಕ ಕಡ್ಡಾಯವಾಗಿ ಹಾಕುವಂತೆ ನೋಡಿಕೊಳ್ಳಬೇಕು’ ಎಂದು ಸರ್ಕಾರಕ್ಕೆ ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ.
‘ವಿದ್ಯಾರ್ಥಿಗಳಿಂದ ವಸೂಲು ಮಾಡುವ ಶುಲ್ಕದ ವಿವರಗಳನ್ನು ಒಳಗೊಂಡ ಫಲಕವನ್ನು ಎಲ್ಲ ಶಾಲೆಗಳ ಮುಂದೆ ಅಳವಡಿಸುವುದನ್ನು ಕಡ್ಡಾಯಗೊಳಿಸಿ 2015ರ ಏ.13ರಂದು ಹೊರಡಿಸಿರುವ ಸುತ್ತೋಲೆಯನ್ನು ಎರಡು ವಾರದಲ್ಲಿ ಜಾರಿಗೊಳಿಸಿ, ಪ್ರಮಾಣಪತ್ರ ಸಲ್ಲಿಸಬೇಕು’ ಎಂದು ತಾಕೀತು ಮಾಡಿದೆ.
ಈ ಕುರಿತು ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ಅನುಷ್ಠಾನಗೊಳಿಸಿ, ಪ್ರಮಾಣಪತ್ರ ಸಲ್ಲಿಸಲಾಗುವುದು. ಅದಕ್ಕಾಗಿ ಎರಡು ವಾರ ಅವಕಾಶ ನೀಡಬೇಕು’ ಎಂದು ಕೋರಿದರು.
ಪ್ರತಿಕ್ರಿಯಿಸಿದ ನ್ಯಾಯಪೀಠ, ವಿಚಾರಣೆಯನ್ನು ಎರಡು ವಾರ ಮುಂದೂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.