ADVERTISEMENT

ಶಾಲೆಯಿಂದ ಹೊರಗುಳಿದ ಮಕ್ಕಳ ಪಿಐಎಲ್‌: ವರದಿ ಸಲ್ಲಿಕೆಗೆ ಕಾಲಾವಕಾಶ

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 19:56 IST
Last Updated 27 ಜುಲೈ 2022, 19:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಶಾಲೆಯಿಂದ ಹೊರ ಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ವಿಚಾರಕ್ಕೆ ಸಂಬಂಧಿಸಿದಂತೆ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ನಡೆದ ವಿವರಗಳನ್ನು ಸಲ್ಲಿಸಲು ಸಮಯ ಕೋರಿದ ಅಮಿಕಸ್ ಕ್ಯೂರಿ (ಕೋರ್ಟ್‌ಗೆ ಸಹಕರಿಸುವ ವಕೀಲ) ಮನವಿಯನ್ನು ಹೈಕೋರ್ಟ್‌ ಮಾನ್ಯ ಮಾಡಿದ್ದು ಎರಡು ವಾರಗಳ ಕಾಲಾವಕಾಶ ನೀಡಿದೆ.

ಈ ಸಂಬಂಧ 2013ರಲ್ಲಿ ಹೈಕೋರ್ಟ್‌, ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹೈಕೋರ್ಟ್‌ನ ಹಿರಿಯ ವಕೀಲರೂ ಆದ ಅಮಿಕಸ್‌ ಕ್ಯೂರಿ ಕೆ.ಎನ್. ಫಣೀಂದ್ರ, ‘ಹೈಕೋರ್ಟ್‌ ನಿರ್ದೇಶನದ ಅನುಸಾರ ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಕರೆತರುವ ವಿಚಾರಕ್ಕೆ ಸಂಬಂಧಿಸಿದಂತೆ ಉನ್ನತಾಧಿಕಾರ ಸಮಿತಿ ಇದೇ 16ರಂದು ಸಭೆ ನಡೆಸಿದೆ. ಸಭೆಯ ನಡಾವಳಿಯ ಕರಡು ಪಟ್ಟಿ ನನಗೆ ತಲುಪಿದೆ. ಆದರೆ, ಅದನ್ನು ಅಂತಿಮಗೊಳಿಸಿ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ಬೇಕು’ ಎಂದು ಕೋರಿದರು.ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ADVERTISEMENT

‘ರಾಜ್ಯದಲ್ಲಿ ಅಂಗನವಾಡಿಗಳಿಂದ 6 ವರ್ಷದೊಳಗಿನ 9.8 ಲಕ್ಷಕ್ಕೂ ಅಧಿಕ ಮಕ್ಕಳು ಹಾಗೂ 14 ವರ್ಷದ ಅಂದಾಜು 25 ಸಾವಿರ ಮಕ್ಕಳು ಶಾಲೆಗಳಿಂದ ಹೊರಗುಳಿದಿದ್ದಾರೆ. ಒಟ್ಟಾರೆ 10 ಲಕ್ಷಕ್ಕೂ ಅಧಿಕ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ‘ ಎಂದು ಅಮಿಕಸ್ ಕ್ಯೂರಿಕಳೆದ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ವರದಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.