ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿರುವ ಪೊಲೀಸ ಆಯುಕ್ತರ ಆದೇಶ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಹೈಕೋರ್ಟ್ಗೆ ತಕಾರರು ಅರ್ಜಿ ಸಲ್ಲಿಸಿದ್ದಾರೆ.
ಈವರೆಗಿನ ಎಸ್ಐಟಿ ತನಿಖೆ ಪರಿಗಣಿಸಬಾರದು. ತನಿಖೆಗೆ ಹೊಸ ತಂಡ ರಚಿಸಲು ಆದೇಶಿಸಬೇಕು ಎಂದು ಅವರು ಕೋರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್, ಮತ್ತು ಎಸ್ಐಟಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.
‘ವೈದ್ಯಕೀಯ ಪರೀಕ್ಷೆ ಸಂದರ್ಭದಲ್ಲಿ ಆರೋಪಿಯ ರಕ್ತ ಮಾದರಿ, ಕೂದಲು, ವೀರ್ಯ, ಗಂಟಲು ದ್ರವ ಮತ್ತು ಉಗುರು ಪಡೆದು ಡಿಎನ್ಎ ಪರೀಕ್ಷೆ ನಡೆಸಬೇಕು. ಆದರೆ, ರಮೇಶ ಜಾರಕಿಹೊಳಿ ಅವರಿಗೆ ನಡೆಸಿದ ವೈದ್ಯಕೀಯ ಪರೀಕ್ಷೆ ಸಂದರ್ಭದಲ್ಲಿ ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ ನಡೆಸಲಾಗಿದೆ’ ಎಂದು ಅವರು ಅರ್ಜಿಯಲ್ಲಿ ದೂರಿದ್ದಾರೆ.
‘ಆರೋಪಿಗೆ ಗೃಹ ಸಚಿವರ ನಿಕಟ ಸಂಪರ್ಕ ಇದೆ. ಎಸ್ಐಟಿ ಮುಖ್ಯಸ್ಥರು ರಜೆಯಲ್ಲಿದ್ದಾರೆ. ಹೀಗಾಗಿ, ಪಾರದರ್ಶಕ ತನಿಖೆ ಸಾಧ್ಯವಿಲ್ಲ. ಹೊಸದಾಗಿ ರಚಿಸುವ ತನಿಖಾ ತಂಡ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು’ ಎಂದು ಅವರು ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.