ADVERTISEMENT

ಸಫಾಯಿ ಕರ್ಮಚಾರಿ ನಿಗಮಕ್ಕೆ ಹೈಕೋರ್ಟ್‌ ತರಾಟೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2022, 19:51 IST
Last Updated 31 ಜನವರಿ 2022, 19:51 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ’ಮಲ ಹೊರುವ ಪದ್ಧತಿ ಮನುಕುಲದ ಮೌಲ್ಯಕ್ಕೆ ಅಪಚಾರ ಎಸಗಿದಂತೆ‘ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌,‘ಶೌಚಗುಂಡಿ ಸ್ವಚ್ಛಗೊಳಿಸುವ ಉದ್ಯೋಗ ನಿಷೇಧ ಮತ್ತು ಪುನವರ್ಸತಿ ಕಾಯ್ದೆಯ ನಿಯಮಗಳನ್ನು ರಾಜ್ಯದಾದ್ಯಂತ ಸಮರೋಪಾದಿಯಲ್ಲಿ ಜಾರಿಗೊಳಿಸಬೇಕು‘ ಎಂದು ಖಡಕ್‌ ಆದೇಶ ನೀಡಿದೆ.

’ಸಹಾಯ ಧನ ಒದಗಿಸಲು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ನಿರ್ದೇಶಿಸಬೇಕು‘ ಎಂದು ಕೋರಿ ಆಂಟೋನಿ ಸೇರಿದಂತೆ ಕೋಲಾರ ಜಿಲ್ಲೆಯ 44 ಸಫಾಯಿ ಕರ್ಮಚಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

’ಅರ್ಜಿದಾರರು 2018ರಲ್ಲಿಯೇ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈವರೆಗೂ ನೀವು ಅವರ ಅರ್ಜಿಗಳನ್ನು ಪರಿಗಣಿಸಿ ಸಹಾಯ ಧನ ಬಿಡುಗಡೆ ಮಾಡಿಲ್ಲ. ಹೈಕೋರ್ಟ್ ಸೂಚನೆ ನೀಡಿದ್ದರೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ‘ ಎಂದು ನ್ಯಾಯಪೀಠ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವಿರುದ್ಧ ಕಿಡಿ ಕಾರಿದೆ.

ADVERTISEMENT

’ಈ ಅನಿಷ್ಠ ‍ಪದ್ಧತಿಯನ್ನುಕೊನೆಗೊಳಿಸಲು ಇಷ್ಟು ವರ್ಷಗಳಾದರೂ ನೀವು ಏನೂ ಮಾಡಿಲ್ಲ. ಅರ್ಜಿದಾರರಿಗೆ ಸಹಾಯ ಧನ ಕಲ್ಪಿಸುವ ಸಂಬಂಧ ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳಬೇಕು. ತಪ್ಪಿದರೆ ನ್ಯಾಯಾಂಗ ನಿಂದನೆ ದಾಖಲಿಸಿಕೊಂಡು ಸಫಾಯಿ ಕರ್ಮಚಾರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ಜೈಲಿಗೆ ಕಳುಹಿಸಲಾಗುವುದು’ ಎಂದು ನ್ಯಾಯಪೀಠ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.