
ಬೆಂಗಳೂರು: ಬುದ್ಧಿಮಾಂದ್ಯ ಯುವಕನ ಕಿಡ್ನಿ ಮಾರಾಟ ಮತ್ತು ಆತನ ನಿಗೂಢ ಸಾವಿನ ಆರೋಪ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಸಬ್ ಇನ್ಸ್ಪೆಕ್ಟರ್ ಹಾಗೂ ಹೆಡ್ ಕಾನ್ಸ್ಟೆಬಲ್ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಹಾಗೂ ಅವರಿಂದ ದಂಡ ವಸೂಲಿ ಮಾಡುವಂತೆ ಶಿಫಾರಸು ಮಾಡಿ ರಾಜ್ಯ ಮಾನವ ಹಕ್ಕುಗಳ ಆಯೋಗ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಆಯೋಗದ ಆದೇಶ ಪ್ರಶ್ನಿಸಿ ಪೊಲೀಸ್ ಅಧಿಕಾರಿಗಳಾದ ವಿ.ಸಂತೋಷ್ ಮತ್ತು ಕೆ.ಎಸ್.ಗೋಪಾಲ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಕೆಲ ಕಾಲ ವಿಚಾರಣೆ ಆಲಿಸಿದ ನ್ಯಾಯಪೀಠ, ‘ಇದೇ ಪ್ರಕರಣದಲ್ಲಿ ಇತರೆ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧದ ಪ್ರಕರಣಕ್ಕೆ ಮತ್ತೊಂದು ನ್ಯಾಯಪೀಠ ಮಧ್ಯಂತರ ತಡೆ ನೀಡಿದೆ. ಆದ್ದರಿಂದ, ಈ ಪ್ರಕರಣದಲ್ಲೂ ಮಧ್ಯಂತರ ತಡೆ ನೀಡಲಾಗುತ್ತಿದೆ’ ಎಂದು ಹೇಳಿತು.
ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಮಾನವ ಹಕ್ಕು ಆಯೋಗ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ದೂರುದಾರ ಶಿವಾನಂದ ಬಿ.ಬಾವೂರು ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಫೆಬ್ರುವರಿ 27ಕ್ಕೆ ಮುಂದೂಡಿತು.
ಪ್ರಕರಣವೇನು?: ಬುದ್ಧಿಮಾಂದ್ಯ ಯುವಕ ಶಂಕರಪ್ಪ (29) ಎಂಬ ಯುವಕನ ಕಿಡ್ನಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2020ರಲ್ಲಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಫ್ಐಆರ್ ದಾಖಲಿಸಲು ಆರು ತಿಂಗಳ ವಿಳಂಬ ಮಾಡಿದ ಮತ್ತು ಸೂಕ್ತ ತನಿಖೆ ನಡೆಸದೆ ಕರ್ತವ್ಯಲೋಪ ಎಸಗಿರುವುದು ಆಯೋಗದ ತನಿಖೆಯಲ್ಲಿ ದೃಢಪಟ್ಟಿತ್ತು.
ಈ ಹಿನ್ನೆಲೆಯಲ್ಲಿ ವಿ.ಸಂತೋಷ್, ಕೆ.ಎಸ್.ಗೋಪಾಲ್ ಸೇರಿದಂತೆ ಐವರು ಪೊಲೀಸರ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಮತ್ತು ಸಬ್ ಇನ್ಸ್ಪೆಕ್ಟರ್ ಅವರಿಂದ ₹1.50 ಲಕ್ಷ, ಹೆಡ್ಕಾನ್ಸ್ಟೆಬಲ್ ಅವರಿಂದ ₹1 ಲಕ್ಷ ದಂಡ ವಸೂಲಿ ಮಾಡುವಂತೆ ಆಯೋಗವು, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿತ್ತು.
ಪ್ರಕರಣ ನಡೆದಾಗ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಗೂ ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಆಗಿರುವ ವಿ.ಸಂತೋಷ್ ಮತ್ತು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿರುವ ಕೆ.ಎಸ್.ಗೋಪಾಲ್ ಈ ಅರ್ಜಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.