
ಬೆಂಗಳೂರು: ಕೋಮು ದ್ವೇಷದ ಮಾತುಗಳನ್ನಾಡಿದ ಆರೋಪದಡಿ ಯೂ–ಟ್ಯೂಬ್ ಚಾನಲ್ನಲ್ಲಿ ಪ್ರಸಾರವಾದ ವಿಡಿಯೊ ಆಧರಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
‘ನನ್ನ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಪುತ್ತೂರಿನ ಹಿರಿಯ ಸಿವಿಲ್ ಹಾಗೂ ಎಸಿಜೆಎಂ ಕೋರ್ಟ್ನಲ್ಲಿರುವ ವಿಚಾರಣೆಯನ್ನು ರದ್ದುಗೊಳಿಸಬೇಕು’ ಎಂದು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ಅವರ ವಾದ ಆಲಿಸಿದ ನ್ಯಾಯಪೀಠ, ‘ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದನ್ನು ಆಧರಿಸಿ ಈ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ–2023ರ (ಬಿಎನ್ಎಸ್ಎಸ್) ಕಲಂ 35(3) ಅಡಿ ನೋಟಿಸ್ ನೀಡಿ, ಆರೋಪಿಯ ಪ್ರತಿ ಹೇಳಿಕೆ ಆಲಿಸದ ಹೊರತು ಮುಂದಿನ ಕ್ರಮ ಜರುಗಿಸುವಂತಿಲ್ಲ ಎಂದು ತೆಲಂಗಾಣ ಹೈಕೋರ್ಟ್ ರೂಪಿಸಿರುವ ಮಾರ್ಗಸೂಚಿಗಳನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಹಾಲಿ ಪ್ರಕರಣದಲ್ಲಿ ಈ ಪ್ರಕ್ರಿಯೆಯನ್ನು ಪಾಲನೆ ಮಾಡಿಲ್ಲ. ಹಾಗಾಗಿ, ಪ್ರಭಾಕರ್ ಭಟ್ ವಿರುದ್ಧದ ತನಿಖೆ ಮತ್ತು ವಿಚಾರಣಾ ಕೋರ್ಟ್ನ ಮುಂದಿನ ನ್ಯಾಯಿಕ ಪ್ರಕ್ರಿಯೆಗೆ ತಡೆ ನೀಡಲಾಗಿದೆ’ ಎಂದು ಆದೇಶಿಸಿತು. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಸುಯೋಗ ಹೇರಳೆ ವಕಾಲತ್ತು ವಹಿಸಿದ್ದಾರೆ.
ಪ್ರಕರಣವೇನು?: ‘ಪುತ್ತೂರಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ಕಳೆದ ತಿಂಗಳ 12ರಂದು ನಡೆದಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಅವರು ಮುಸ್ಲಿಮ್, ಕ್ರಿಶ್ಚಿಯನ್ ಸಮುದಾಯಗಳ ವಿರುದ್ಧ ದ್ವೇಷ ಹರಡುವಂತಹ ಭಾಷಣ ಮಾಡಿದ್ದಾರೆ. ಈ ಭಾಷಣವನ್ನು ವಿಕಸನ ಟಿವಿ ಯೂ–ಟ್ಯೂಬ್ನಲ್ಲಿ ಪ್ರಸಾರ ಮಾಡಲಾಗಿತ್ತು’ ಎಂಬ ಆರೋಪದಡಿ ಅವರ ವಿರುದ್ಧ ಬಿಎನ್ಎಸ್ಎಸ್ ಕಲಂ 196, 299, 302, 353(2)ರ ಜೊತೆಗೆ 3(5) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.