ADVERTISEMENT

ಸ್ವಪ್ರತಿಷ್ಠೆ ಬಿಡಿ; ರಾಜಿ ಮಾಡಿಕೊಳ್ಳಿ: ಕುಮಾರಸ್ವಾಮಿ,ಚಂದ್ರಶೇಖರ್‌ಗೆ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 23:38 IST
Last Updated 12 ಫೆಬ್ರುವರಿ 2026, 23:38 IST
<div class="paragraphs"><p>ಕರ್ನಾಟಕ ಹೈಕೋರ್ಟ್</p></div>

ಕರ್ನಾಟಕ ಹೈಕೋರ್ಟ್

   

ಬೆಂಗಳೂರು: ‘ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ಅವರಿಗೆ ಬೆದರಿಕೆ ಹಾಕಿದ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಿ’ ಎಂದು
ಹೈಕೋರ್ಟ್, ಪ್ರಕರಣದ ಆರೋಪಿಯಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಫಿರ್ಯಾದುದಾರ ಚಂದ್ರಶೇಖರ್‌ ಅವರಿಗೆ ಮೌಖಿಕವಾಗಿ ಸೂಚಿಸಿದೆ.

‘ನಮ್ಮ ವಿರುದ್ಧ ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಅರ್ ರದ್ದುಪಡಿಸಬೇಕು’ ಎಂದು ಕೋರಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಮತ್ತು ಸುರೇಶ್‌ ಬಾಬು ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿn ಎಸ್‌.ಸುನಿಲ್ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಕುಮಾರಸ್ವಾಮಿ ಪರ ಪದಾಂಕಿತ ಹಿರಿಯ ವಕೀಲ ಹಷ್ಮತ್ ಪಾಷ ಅವರು, ‘ಚಂದ್ರಶೇಖರ್‌ ಅವರಿಗೆ ಕುಮಾರಸ್ವಾಮಿ ಬೆದರಿಕೆ ಹಾಕಿಲ್ಲ. ಅವರಿಬ್ಬರ ನಡುವೆ ಯಾವುದೇ ಸಂಭಾಷಣೆಯೇ ನಡೆದಿಲ್ಲ. ಕುಮಾರಸ್ವಾಮಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದನ್ನೇ ಆಧರಿಸಿ ಚಂದ್ರಶೇಖರ್‌ ದೂರು ದಾಖಲಿಸಿದ್ದಾರೆ’ ಎಂದು ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ನ್ಯಾಯಪೀಠಕ್ಕೆ ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ‘ಕುಮಾರಸ್ವಾಮಿ ಮತ್ತು ಚಂದ್ರಶೇಖರ್‌ ಇಬ್ಬರೂ ಸಾರ್ವಜನಿಕ ವ್ಯವಸ್ಥೆಯಲ್ಲಿ ಇರುವವರು. ಸಾರ್ವಜನಿಕ ಜೀವನದಲ್ಲಿ ಇಂತಹ ಸಂದರ್ಭಗಳು ಎದುರಾಗುವುದು ಸಹಜ. ಮುಂದೆ ಎಲ್ಲಿಯಾದರೂ ಇಬ್ಬರೂ ಮುಖಾಮುಖಿ ಭೇಟಿಯಾಗುವ ಸಾಧ್ಯತೆ ಇದ್ದೇ ಇರುತ್ತದೆ. ಹಾಗಾಗಿ, ಇಬ್ಬರೂ ಸ್ವ-ಪ್ರತಿಷ್ಠೆ ಕೈಬಿಟ್ಟು, ಪರಸ್ಪರ ಚರ್ಚಿಸಿ, ರಾಜಿ ಸಂಧಾನ ಮಾಡಿಕೊಂಡು ಪ್ರಕರಣ ಹಿಂಪಡೆಯುವುದು ಸೂಕ್ತ’ ಎಂದರು.

‘ಪ್ರಕರಣ ಮುಂದುವರಿಸುವುದರಿಂದ ಇಬ್ಬರಿಗೂ ಯಾವುದೇ ಲಾಭವಾಗುವುದಿಲ್ಲ. ಕೇವಲ ಮಾಧ್ಯಮ
ಗಳಿಗೆ ಸುದ್ದಿಯಾಗುತ್ತದೆ ಅಷ್ಟೇ. ಹಾಗಾಗಿ, ಪ್ರಕರಣವನ್ನು ಚರ್ಚೆಯ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಬಗ್ಗೆ
ದೂರುದಾರರು ಮತ್ತು ಅರ್ಜಿದಾರರು ಮುಕ್ತ ಮನಸ್ಸಿನಿಂದ ಮಾತನಾಡಿಕೊಳ್ಳಲಿ’ ಎಂದರು. ಇದಕ್ಕೆ
ಹಷ್ಮತ್‌ ಪಾಷ ಸಮ್ಮತಿ ಸೂಚಿಸಿದರಲ್ಲದೆ, ಕುಮಾರಸ್ವಾಮಿ ಅವರಿಗೆ ನ್ಯಾಯಾಲಯದ ಸಲಹೆಯನ್ನು ತಿಳಿಸುವುದಾಗಿ ಭರವಸೆ ನೀಡಿದರು.

ಇದಕ್ಕೆ ನ್ಯಾಯಮೂರ್ತಿ ಅವರು, ‘ಕುಮಾರಸ್ವಾಮಿ ಮತ್ತು ಚಂದ್ರಶೇಖರ್‌ ಪ್ರಕರಣ ಹಿಂಪಡೆಯುವ ಕುರಿತು ಪರಸ್ಪರ ಚರ್ಚಿಸಿ ನ್ಯಾಯಾಲಯಕ್ಕೆ ತಮ್ಮ ತೀರ್ಮಾನ ಏನೆಂಬುದನ್ನು ತಿಳಿಸಬೇಕು. ಒಂದೊಮ್ಮೆ ಪ್ರಕರಣವನ್ನು ಮುಂದುವರಿಸಲು ತೀರ್ಮಾನಿಸಿದರೆ ನ್ಯಾಯಾಲಯ ಮೆರಿಟ್‌ ಆಧಾರದಲ್ಲಿ ವಿಚಾರಣೆ ನಡೆಸಿ ಕಾನೂನು ಪ್ರಕಾರ ತನ್ನ ನಿರ್ಧಾರ ಕೈಗೊಳ್ಳಲಿದೆ’ ಎಂದ ತಿಳಿಸಿ ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿದರು.‌

ದೂರು: ‘ಕುಮಾರಸ್ವಾಮಿ ನನ್ನ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ಚಂದ್ರಶೇಖರ್‌, ಸಂಜಯನಗರ ಪೊಲೀಸ್‌ ಠಾಣೆಯಲ್ಲಿ 2024ರಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಭಾರತೀಯ ನ್ಯಾಯ ಸಂಹಿತಾ–2023ರ (ಬಿಎನ್‌ಎಸ್‌) ಕಲಂ 224 (ಸರ್ಕಾರಿ ನೌಕರರಿಗೆ ಅವರ ಅಧಿಕೃತ ಕರ್ತವ್ಯಗಳ ಮೇಲೆ ಪ್ರಭಾವ ಬೀರಲು ಬೆದರಿಕೆ ಹಾಕಿದ) ಆರೋಪದಡಿ ಎಫ್‌ಐಆರ್‌ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.