ಬೆಂಗಳೂರು: ರಾಜ್ಯ ವಿಧಾನಸಭೆಗೆ 2013ರ ಮೇ 3ರಂದು ನಡೆದ ಚುನಾವಣೆ ಸಂದರ್ಭದಲ್ಲಿ ರಾಬರ್ಟ್ಸನ್ ಪೇಟೆಯ ಗಾಂಧಿ ಸರ್ಕಲ್ನಲ್ಲಿ ಎರಡು ರಾಜಕೀಯ ಪಕ್ಷಗಳ ಮುಖಂಡರ ನಡುವೆ ನಡೆದಿದ್ದ ಗಲಾಟೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಮಾಜಿ ಜಿ.ಪಂ.ಸದಸ್ಯ ಎ.ವಿ.ಲಕ್ಷ್ಮಿನಾರಾಯಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಕೆ.ಎಚ್.ಮುನಿಯಪ್ಪ ಮತ್ತು ಎ.ಎಂ.ಲಕ್ಷ್ಮಿನಾರಾಯಣ ಸಲ್ಲಿಸಿದ್ದ ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಬುಧವಾರ ವಿಚಾರಣೆ ನಡೆಸಿ ಜಾಮೀನು ನೀಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ನ್ಯಾಯಾಲಯಕ್ಕೆ ‘ಬಿ’ ಅಂತಿಮ ವರದಿ ಸಲ್ಲಿಸಲಾಗಿತ್ತು. ಆದರೆ ವರದಿಯನ್ನು ಪ್ರತಿಭಟಿಸಿ ಸಲ್ಲಿಸಲಾದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮನ್ನಿಸಿದ್ದು ದೂರನ್ನು ವಿಚಾರಣೆಗೆ ಪರಿಗಣಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.