ಬೆಂಗಳೂರು:‘21 ವಾರ ಮೂರು ದಿನಗಳ ಭ್ರೂಣದ ಬೆಳವಣಿಗೆ ದೈಹಿಕ ನ್ಯೂನ್ಯತೆಯಿಂದ ಕೂಡಿರುವ ಕಾರಣ ಗರ್ಭಪಾತಕ್ಕೆ ಅನುವು ಮಾಡಿಕೊಡಬೇಕು’ ಎಂಬ 29 ವರ್ಷದ ಮಹಿಳೆಯೊಬ್ಬರ ಕೋರಿಕೆಗೆ ಹೈಕೋರ್ಟ್ ಅಸ್ತು ಎಂದಿದೆ.
"ಗರ್ಭಪಾತವನ್ನು ಮಹಿಳೆ ತಮ್ಮ ಸ್ವಂತ ವೆಚ್ಚದಲ್ಲಿ ಮಾಡಿಸಿಕೊಳ್ಳಬೇಕು. ಒಂದು ವೇಳೆ ಅರ್ಜಿದಾರ ಮಹಿಳೆ ಗರ್ಭಪಾತದಿಂದ ಭವಿಷ್ಯದಲ್ಲಿ ಯಾವುದಾದರೂ ತೊಂದರೆ ಎದುರಿಸಬೇಕಾಗಿ ಬಂದರೆ; ಅದಕ್ಕೆ ಕೋರ್ಟ್ ನಿರ್ದೇಶನದ ಅನುಸಾರ ಮಹಿಳೆಯನ್ನು ಪರಿಶೀಲನೆ ಮಾಡಿರುವ ವಾಣಿ ವಿಲಾಸ ಆಸ್ಪತ್ರೆಯ ಮೆಡಿಕಲ್ ಸೂಪರಿಂಡೆಂಟ್ ನೇತೃತ್ವದ ತಜ್ಞ ವೈದ್ಯರ ತಂಡ ಹೊಣೆಯಾಗುವುದಿಲ್ಲ" ಎಂದು ಹೇಳಿದೆ.
ನಗರದ ಮಹಿಳೆ ಸಲ್ಲಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಲೇವಾರಿ ಮಾಡಿದೆ.
ವಿಚಾರಣೆ ವೇಳೆಸರ್ಕಾರದ ಪರ ವಕೀಲ ವಿಜಯಕುಮಾರ್ ಪಾಟೀಲ, ವಾಣಿ ವಿಲಾಸ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಶುಕ್ರವಾರವಷ್ಟೆ (ಡಿ.14) ಮಹಿಳೆಯ ಪರೀಕ್ಷೆ ನಡೆಸಿದ್ದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡಿದರು.
ವರದಿ ಗರ್ಭಪಾತಕ್ಕೆ ಅನುಮತಿ ನೀಡಿರುವುದನ್ನು ಮಾನ್ಯ ಮಾಡಿದ ನ್ಯಾಯಪೀಠ ಮಾನ್ಯ ಮಾಡಿದೆ.
ಅರ್ಜಿದಾರ ಮಹಿಳೆಯ ಕೋರಿಕೆ ಏನಿತ್ತು?
* ಗರ್ಭಸ್ಥ ಶಿಶುವಿನ ಅನ್ನನಾಳದ ಬೆಳವಣಿಗೆಯೇ ಆಗಿಲ್ಲ.
* ಈ ಕಾರಣಕ್ಕೆ ಮಗು ಜನಿಸಿದ ಮೇಲೆ ತೊಂದರೆಗೆ ಒಳಗಾಗಲಿದೆ.
* ಹೆರಿಗೆ ಸಮಯದಲ್ಲಿ ತಾಯಿಗೂ ಅಪಾಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
* ಸದ್ಯದ ಸ್ಥಿತಿಯಲ್ಲಿ ಮಗು ಹುಟ್ಟಿದ ಕೂಡಲೇ ಶಸ್ತ್ರಚಿಕಿತ್ಸೆ ನಡೆಸಬೇಕಿದೆ.
* ಒಂದು ವೇಳೆ ಶಸ್ತ್ರಚಿಕಿತ್ಸೆ ನಡೆಸಿದರೂ ಅದು ಬದುಕುಳಿಯುವ ಸಾಧ್ಯತೆ ಕಡಿಮೆ.
* ಆದ್ದರಿಂದ ಗರ್ಭಪಾತಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.