ADVERTISEMENT

ಹಿಜಾಬ್ ವಿವಾದ: ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ನಡೆಯುತ್ತಿದೆ– ಸಚಿವ ಕೋಟ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2022, 10:36 IST
Last Updated 5 ಫೆಬ್ರುವರಿ 2022, 10:36 IST
ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸಚಿವ ಕೋಟ ಶ್ರೀನಿವಾಸ ಪೂಜಾರಿ   

ಬೆಂಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಬರಲು ಅವಕಾಶ ನೀಡಬೇಕೆಂಬ ಬೇಡಿಕೆ ವಿಷಯದಲ್ಲಿ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ನಡೆಯುತ್ತಿದೆ. ಪ್ರತಿಕ್ರಿಯೆಯ ರೂಪದಲ್ಲಿ ಕೆಲವರು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ. ಆದರೆ, ಕೆಲವರು ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಸಮಾಜ ಒಡೆಯಲು ಕುತಂತ್ರ ರೂಪಿಸಿದ್ದಾರೆ. ಸರ್ಕಾರ ಇದನ್ನು ಸಹಿಸುವುದಿಲ್ಲ' ಎಂದರು.

ಒಂದೂವರೆ ವರ್ಷದಿಂದ ಯಾವ ಸಮಸ್ಯೆಯೂ ಇರಲಿಲ್ಲ. ಹೊರಗಿನ ಮತಾಂಧ ಶಕ್ತಿಗಳ ಕೈವಾಡದಿಂದ ಈಗ ಸಮಸ್ಯೆ ಉಂಟಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ADVERTISEMENT

'ಹಿಜಾಬ್ ಧರಿಸುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ‌ ತರಗತಿಗಳಿಗೆ ಬರುವುದು ತಪ್ಪಲ್ಲವೆ? ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಒಂದು ತಪ್ಪಾದರೆ ಇನ್ನೊಂದು ಕೂಡ ತಪ್ಪು. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಅಷ್ಟೇ ಇದು' ಎಂದರು.

'ಹಿಜಾಬ್ ವಿಚಾರದಲ್ಲಿ ಸರ್ಕಾರಕ್ಕೆ ಸ್ಪಷ್ಟತೆ ಇದೆ. ಯಾವ ಗೊಂದಲವೂ ಇಲ್ಲ. ಹಿಜಾಬ್ ಹೆಸರಿನಲ್ಲಿ ಮತಾಂಧತೆ ಪ್ರದರ್ಶಿಸುವುದನ್ನು ನಾವು ವಿರೋಧಿಸುತ್ತೇವೆ' ಎಂದು ಪೂಜಾರಿ ಹೇಳಿದರು.

ಈ ವಿಚಾರ ಕಾಶ್ಮೀರದಲ್ಲೂ ಚರ್ಚೆಗೆ ಬರಬೇಕು ಮತ್ತು ಅದರಿಂದ ದೇಶಕ್ಕೆ ತೊಂದರೆ ಆಗಬೇಕು ಎಂಬುದು ಕೆಲವರ ಉದ್ದೇಶ. ದೇಶದ ಭದ್ರತೆಗೆ ಧಕ್ಕೆ ತರಲು ಇಂತಹ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಹಿಜಾಬ್ ಧರಿಸಿ ತರಗತಿಗೆ ಬರಲು ಅವಕಾಶ ನೀಡಬೇಕೆಂಬ ಬೇಡಿಕೆಯನ್ನು ವಿರೋಧಿಸಬೇಕು ಎಂಬ ವಿಚಾರ ಸಿದ್ದರಾಮಯ್ಯ ಅವರ ಮನಸ್ಸಿನಲ್ಲೂ ಇದೆ. ಆದರೆ, ಮತಗಳ ಮೇಲೆ ಕಣ್ಣಿಟ್ಟು ಸರ್ಕಾರವನ್ನು ಚುಚ್ಚುವ ಕೆಲಸ ಮಾಡುತ್ತಿದ್ದಾರೆ. ಈ ವೇಳೆಗೆ ಸಿದ್ದರಾಮಯ್ಯ ಮತ್ತು ಡಿ.ಕೆ.‌ಶಿವಕುಮಾರ್ ಅವರೇ ಮಧ್ಯ ಪ್ರವೇಶ ಮಾಡಿ ವಿಷಯವನ್ನು ತಿಳಿಗೊಳಿಸಬೇಕಿತ್ತು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.