ಬೆಂಗಳೂರು: ಹಿಜಾಬ್ಗೆ (ಶಿರವಸ್ತ್ರ) ಸಂಬಂಧಿಸಿದಂತೆ ದಾಖಲಾಗಿರುವ ರಿಟ್ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯ ಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದದ ಪೀಠ ಫೆಬ್ರುವರಿ 14ರಸೋಮವಾರಕ್ಕೆ ಮುಂದೂಡಿದೆ.
ಸಿಜೆಐ ನೇತೃತ್ವದ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ಮಹಿಳಾ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರನ್ನು ಒಳಗೊಂಡ ಮೂವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೂರ್ಣಪೀಠ ಗುರುವಾರ ಅರ್ಜಿಗಳ ವಿಚಾರಣೆ ನಡೆಸಿತು.
ಹಿಜಾಬ್ ಕುರಿತು ಏಳು ರಿಟ್ ಹಾಗೂ ಎರಡು ಮಧ್ಯಂತರ ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರದಿಂದ ವಿಚಾರಣೆಗೆ ಕೈಗೆತ್ತಿ ಕೊಂಡಿದೆ. ಬುಧವಾರ ಮಧ್ಯಾಹ್ನ ಎರಡನೇ ದಿನದ ವಿಚಾರಣೆಗೆ ನಿಗದಿಪಡಿಸಲಾಗಿತ್ತು. ನಿಗದಿಯಂತೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ‘ಈ ಪ್ರಕರಣವು ಸಾಂವಿಧಾನಿಕವಾದ ಸಾಕಷ್ಟು ಸೂಕ್ಷ್ಮ ಅಂಶಗಳನ್ನು ಒಳಗೊಂಡಿರುವ ಕಾರಣ ಇವುಗಳ ವಿಚಾರಣೆ ವಿಸ್ತೃತ ನ್ಯಾಯಪೀಠದಲ್ಲೇ ನಡೆಯುವುದು ಒಳಿತು’ ಎಂದು ಅಭಿಪ್ರಾಯಪಟ್ಟಿದ್ದರು. ಅಂತಿಮವಾಗಿ ಪ್ರಕರಣವನ್ನು ಸಿಜೆಐ ನೇತೃತ್ವದ ಸಾಂವಿಧಾನಿಕ ಪೂರ್ಣಪೀಠಕ್ಕೆ ನೀಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.