ADVERTISEMENT

ಕನ್ನಡ ಪರ ಧ್ವನಿ ಎತ್ತಿದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2019, 20:12 IST
Last Updated 16 ಸೆಪ್ಟೆಂಬರ್ 2019, 20:12 IST
   

ಬೆಂಗಳೂರು: ‘ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ’ ಎಂಬ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ, ‘ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ರಾಜ್ಯ ದಲ್ಲಿ ಕನ್ನಡವೇ ಅಧಿಕೃತ ಭಾಷೆ’ ಎಂದು ಬಿಜೆಪಿಯವರೇ ಆದ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿರುವುದು ವಿಭಿನ್ನ ಚರ್ಚೆ ಹುಟ್ಟು ಹಾಕಿದೆ.

‘ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮಸರ್ಕಾರಸಹಿಸುವುದಿಲ್ಲ’ ಎನ್ನುವ ಮೂಲಕ ಯಡಿಯೂರಪ್ಪ ಪರೋಕ್ಷ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ಶಾಅವರು ‘ಹಿಂದಿ ದಿವಸ್‌’ ಆಚರಣೆಯ ಸಂದರ್ಭದಲ್ಲಿ ‘ಒಂದು ದೇಶ, ಒಂದು ಭಾಷೆ’ ಎಂದು ಪ್ರತಿಪಾದಿಸಿದ್ದರು.

ADVERTISEMENT

ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗಿ ಆಂದೋಲನದ ರೂಪವನ್ನೂ ತಾಳಿತ್ತು.ಕರ್ನಾಟಕವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ಕೆಲವು ಸಚಿವರು ಅಮಿತ್ ಶಾ ನಿಲುವಿಗೆ ಬೆಂಬಲ ಸೂಚಿಸಿದ್ದರು.

ಹಿಂದಿ ಹೇರಿಕೆಯನ್ನು ರಾಜ್ಯದ ಬಿಜೆಪಿ ಮುಖಂಡರು ಬೆಂಬಲಿಸುತ್ತಿದ್ದಾರೆ ಎಂಬ ಆಕ್ರೋಶ ಹೆಚ್ಚುತ್ತಿರುವ ಹೊತ್ತಿನಲ್ಲಿ, ರಾಷ್ಟ್ರೀಯ ಅಧ್ಯಕ್ಷರ ನಿಲುವಿಗೆ ಯಡಿಯೂರಪ್ಪ ಅವರು ಭಿನ್ನ ನಿಲುವು ತಳೆದಿರುವುದು ಪಕ್ಷದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.