ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್ ರೋಗ ಕೈಮೀರುವ ಹಂತ ತಲುಪಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಕ್ಷಣವೇ ಸರ್ವ ಪಕ್ಷಗಳ ಸಭೆ ಕರೆಯಬೇಕು’ ಎಂದು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ ಆಗ್ರಹಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಆರೋಗ್ಯ ಸೇವೆಗೆ ಅಗತ್ಯವಿರುವ ವೈದ್ಯರು ಮತ್ತು ಸಿಬ್ಬಂದಿಯನ್ನು ವಿಶೇಷ ನೇಮಕಾತಿ ಮೂಲಕ ನೇಮಿಸಿಕೊಳ್ಳಬೇಕು. ಕೊರೊನಾ ಸೋಂಕು ದೃಢಪಟ್ಟವರಿಗೆ ₹ 2 ಲಕ್ಷದಿಂದ ₹ 5 ಲಕ್ಷ ಆರ್ಥಿಕ ಸಹಾಯ ಸಿಗುವಂಥ ವಿಮೆಯನ್ನು ರಾಜ್ಯ ಸರ್ಕಾರವೇ ಮಾಡಿಕೊಡಬೇಕು. ಆ ಮೂಲಕ ಜನರಿಗೆ ನೈತಿಕ ಸ್ಥೈರ್ಯ ತುಂಬ ಬೇಕು. ಆದರೆ, ಸರ್ಕಾರ ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ’ ಎಂದು ದೂರಿದರು.
‘ಇವತ್ತು ಚಿಕಿತ್ಸೆ ಸಿಗದೆ ಸೋಂಕಿತರು ರಸ್ತೆಯಲ್ಲಿ ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಷಯದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸಬೇಕು’ ಎಂದರು.
ಕಳಪೆ ಎಂದು ವರದಿ: ‘ಕೋವಿಡ್ ನಿರ್ವಹಣೆಗೆ ಸರ್ಕಾರ ಖರೀದಿಸಿರುವ ಚಿಕಿತ್ಸಾ ಉಪಕರಣಗಳು ಕಳಪೆ ಗುಣಮಟ್ಟದ್ದಾಗಿದ್ದು, ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ದೂರುಗಳು ಕೇಳಿಬಂದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಹೊಸಕೋಟೆಯ ಎಸ್.ಎಂ. ಫಾರ್ಮಾಸ್ಯೂಟಿಕಲ್ನಿಂದ ಸರ್ಕಾರ ಖರೀದಿಸಿದ ಸ್ಯಾನಿಟೈಸರ್ ಕಳಪೆ ಗುಣಮಟ್ಟದ್ದಾಗಿದೆ ಎಂದು ರಾಮನಗರ ಮತ್ತು ಕಲಬುರ್ಗಿಯ ಸರ್ಕಾರಿ ಪ್ರಯೋಗಾಲಯಗಳೇ ಪ್ರಮಾಣೀಕರಿಸಿವೆ’ ಎಂದು ದಾಖಲೆಗಳನ್ನು ಪಾಟೀಲ ಬಿಡುಗಡೆ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.