ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣತಿಯ ವರದಿಯನ್ನು ಸರ್ಕಾರ ಸ್ವೀಕರಿಸಿ, ಅಂಗೀಕರಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಇಲ್ಲಿ ಬುಧವಾರ ಒತ್ತಾಯಿಸಿದರು.
‘ಆಯೋಗ ಸಿದ್ಧಪಡಿಸಿರುವ ವರದಿಯನ್ನು ಸರ್ಕಾರ ಸ್ವೀಕರಿಸಿಯೂ ಇಲ್ಲ. ತಿರಸ್ಕರಿಸಿಯೂ ಇಲ್ಲ. ₹164 ಕೋಟಿ ಖರ್ಚುಮಾಡಿ ಸಿದ್ಧಪಡಿಸಿರುವ ವರದಿ ಮೂಲೆ ಸೇರುವಂತಾಗಿದೆ. ತಕ್ಷಣ ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ಒಂಬತ್ತು ದಶಕಗಳ ನಂತರ ಜಾತಿ ಗಣತಿ ನಡೆದಿದೆ. ದೇಶದಲ್ಲೇ ರಾಜ್ಯದಲ್ಲಿ ಮೊದಲ ಬಾರಿಗೆ ವೈಜ್ಞಾನಿಕವಾಗಿ ಇಂತಹ ಗಣತಿ ನಡೆದಿದ್ದು, ಈ ವರದಿ ಹೊರ ಬಂದರೆ ಯಾವ ಜಾತಿಗಳು ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದಿವೆ ಎಂಬುದು ಗೊತ್ತಾಗುತ್ತದೆ. ಆ ಕಾರಣಕ್ಕಾಗಿ ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.
ವಿದ್ಯಾರ್ಥಿ ವೇತನ:ರಾಜ್ಯದಲ್ಲಿ 20 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನಿಲ್ಲಿಸಲಾಗಿದ್ದು, ತಕ್ಷಣ ಮಕ್ಕಳಿಗೆ ವೇತನ ನೀಡಬೇಕು. ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡಬಾರದು ಎಂದರು.
ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಮಾಡಿ ವಿದ್ಯಾರ್ಥಿ ವೇತನ ನೀಡುವಂತೆ ಮನವಿ ಮಾಡಲಾಗಿತ್ತು. ಚುನಾವಣೆ ನಂತರ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.