ಬೆಂಗಳೂರು: ‘ನಾನು ಎಚ್ಎಂಟಿಯನ್ನು ಪುನಶ್ಚೇತನ ಮಾಡಬೇಕು ಎಂದು ಪ್ರಯತ್ನಿಸುತ್ತಿದ್ದರೆ, ಅದಕ್ಕೆ ರಾಜ್ಯ ಸರ್ಕಾರದ ಹಲವರು ಅಡ್ಡಿ ಮಾಡುತ್ತಿದ್ದಾರೆ. ಅವರು ಎಷ್ಟೇ ಅಡ್ಡಿ ಮಾಡಿದರೂ ಎಚ್ಎಂಟಿಯನ್ನು ಪುನಶ್ಚೇತನ ಮಾಡಿಯೇಮಾಡುತ್ತೇನೆ’ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಚ್ಎಂಟಿ ಭೂಮಿಯನ್ನು ಉಳಿಸಲು ಕ್ರಮ ತೆಗೆದುಕೊಂಡಿದ್ದ ಐಎಫ್ಎಸ್ ಅಧಿಕಾರಿಯನ್ನು ರಾಜ್ಯ ಸರ್ಕಾರ, ಅರಣ್ಯ ಇಲಾಖೆ ಅಮಾನತು ಮಾಡಿದೆ. ಆದರೆ ಯಾವುದಕ್ಕೂ ನಾನು ಸೊಪ್ಪು ಹಾಕುವುದಿಲ್ಲ’ ಎಂದರು.
‘ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನ ಮಾಡುವ ಯತ್ನ ನಡೆಯುತ್ತಿದೆ. ಇದಕ್ಕಾಗಿ ನಮ್ಮ ಸಚಿವಾಲಯದ ಕಾರ್ಯದರ್ಶಿ ಭದ್ರಾವತಿಗೆ ಭೇಟಿ ನೀಡಿದ್ದಾರೆ. ಈ ಎಲ್ಲ ಕೆಲಸಗಳೂ ವೇಗವಾಗಿ ಆಗುತ್ತವೆ’ ಎಂದರು.
‘ರಾಜ್ಯ ಸರ್ಕಾರದ ಕೆಲ ನಾಯಕರ ಬಗ್ಗೆ ನನಗೆ ಅಸೂಯೆ ಎಂದು ಕೆಲವರು ಮಾತನಾಡಿಕೊಳ್ಳುತ್ತಾರೆ. ನರೇಂದ್ರ ಮೋದಿ ಅವರು ಕರೆದು ನನಗೆ ಕೇಂದ್ರ ಸರ್ಕಾರದ ಎರಡು ಪ್ರಮುಖ ಖಾತೆಗಳನ್ನು ನೀಡಿದ್ದಾರೆ. ಎರಡೂ ಖಾತೆಗಳನ್ನು ಚೆನ್ನಾಗಿ ನಿರ್ವಹಿಸುತ್ತಿದ್ದೇನೆ. ರಾಜ್ಯಕ್ಕಾಗಿಯೂ ಕೆಲಸ ಮಾಡುತ್ತಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.