ADVERTISEMENT

‌‌ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸಕ್ಕೆ ಹುಸಿ ಬಾಂಬ್‌ ಸಂದೇಶ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 23:30 IST
Last Updated 6 ಜೂನ್ 2025, 23:30 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಮುಖ್ಯಮಂತ್ರಿ ಅಧಿಕೃತ ನಿವಾಸ ಹಾಗೂ ಕೋರಮಂಗಲದ ಪಾಸ್ ಪೋರ್ಟ್ ಕಚೇರಿಗೆ ಶುಕ್ರವಾರ ಬೆಳಿಗ್ಗೆ ಇ–ಮೇಲ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು.

ನಂತರ, ಹೈಗ್ರೌಂಡ್ಸ್‌ ಠಾಣೆ ಪೊಲೀಸರು, ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಇ–ಮೇಲ್ ಸಂದೇಶ ಎಂಬುದು ಮೇಲ್ನೋಟಕ್ಕೆ ಕಂಡುಬಂತು ಎಂದು ಪೊಲೀಸರು ಹೇಳಿದರು.

ADVERTISEMENT

ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಇ–ಮೇಲ್‌ ಅನ್ನು ಸಿಬ್ಬಂದಿ ಪರಿಶೀಲಿಸುತ್ತಿದ್ದಾಗ ಬಾಂಬ್‌ ಬೆದರಿಕೆ ಸಂದೇಶ ಬಂದಿರುವುದು ಗೊತ್ತಾಗಿತ್ತು. ಕೂಡಲೇ ಅವರು ಪೊಲೀಸರಿಗೆ ಹಾಗೂ ಬಾಂಬ್ ಪತ್ತೆ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಗಮನಕ್ಕೆ ತಂದಿದ್ದರು.

ಮುಖ್ಯಮಂತ್ರಿಯವರ ಅಧಿಕೃತ ನಿವಾಸ ‘ಕಾವೇರಿ’,  ಗೃಹಕಚೇರಿ ‘ಕೃಷ್ಣಾ’ದಲ್ಲಿಯೂ ಪರಿಶೀಲನೆ ನಡೆಸಲಾಗಿದೆ. ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ನಂತರ ಸ್ಥಳದಲ್ಲಿದ್ದವರು ನಿಟ್ಟುಸಿರು ಬಿಟ್ಟಿರು.

‘ಎಫ್‌ಐಆರ್ ಮಾಡಲು ಕೋರ್ಟ್‌ನಲ್ಲಿ ಅನುಮತಿ ಕೇಳಿದ್ದೇವೆ. ಕೋರ್ಟ್ ಅನುಮತಿ ಕೊಟ್ಟ ನಂತರ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನು ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೂ ಇದೇ ರೀತಿಯ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದಿತ್ತು. ಅದನ್ನು ನೋಡಿ ಆತಂಕಗೊಂಡ ಅಲ್ಲಿನ ಸಿಬ್ಬಂದಿ, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲಿಯೂ ಪೊಲೀಸರು ಪರಿಶೀಲನೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.