ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣದ ತನಿಖೆ ಸರಿಯಾಗಿ ನಡೆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಸೌಧವು ವ್ಯಾಪಾರ ಸೌಧವಾಗಿ ಬದಲಾಗಿರುವುದರ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಪಿಎಸ್ಐ ಹುದ್ದೆ ಪಡೆಯಲು ಇಚ್ಛಿಸಿದ್ದ ಅಭ್ಯರ್ಥಿಯೊಬ್ಬರಿಂದ ₹ 15 ಲಕ್ಷ ಪಡೆದಿರುವುದಕ್ಕೆ ಸಂಬಂಧಿಸಿದಂತೆ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ದಡೇಸೂಗೂರ್ ಅವರು ಮೊಬೈಲ್ ಮೂಲಕ ನಡೆಸಿರುವ ಸಂಭಾಷಣೆಯ ವಿವರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಕುರಿತು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
‘ಅಭ್ಯರ್ಥಿಯೊಬ್ಬರಿಂದ ₹ 15 ಲಕ್ಷ ಪಡೆದಿರುವುದಾಗಿ ಶಾಸಕ ದಡೇಸೂಗೂರ್ ಒಪ್ಪಿಕೊಂಡಿದ್ದಾರೆ. ಆದರೆ, ‘ನಾನು ಕೊಲೆ ಮಾಡಿಲ್ಲ, ಕೊಲೆಯತ್ನ ಮಾಡಿದ್ದೆ’ ಎಂಬ ಅರ್ಥದಲ್ಲಿ ಈಗ ಮಾತನಾಡುತ್ತಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮದ ಹಗರಣವನ್ನು ಪರೀಕ್ಷಾ ಕೇಂದ್ರಕ್ಕೆ ಸೀಮಿತಗೊಳಿಸಲು ಸರ್ಕಾರ ಯತ್ನಿಸುತ್ತಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಪ್ರಕರಣದಲ್ಲಿ ಬಂಧಿತರಾಗಿರುವ ಐಪಿಎಸ್ ಅಧಿಕಾರಿಗೆ ಸತ್ಯ ಬಹಿರಂಗಪಡಿಸಲು ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.