ADVERTISEMENT

ಮೈಸೂರು: ವಾರಾಂತ್ಯದಲ್ಲಿ ದೇವರ ದರ್ಶನವಿಲ್ಲ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 5:08 IST
Last Updated 12 ಜೂನ್ 2020, 5:08 IST
ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ
ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ   

ಮೈಸೂರು: ಚಾಮುಂಡಿಬೆಟ್ಟ, ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಗಳಿಗೆ ಪ್ರತಿ ಶನಿವಾರ, ಭಾನುವಾರ ಮತ್ತು ಸಾರ್ವಜನಿಕ ರಜಾ ದಿನಗಳಂದು ಸಾರ್ವಜನಿಕರಿಗೆ ದೇವರ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶಿಸಿದ್ದಾರೆ.

ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆ ಮೈಸೂರು ಜಿಲ್ಲಾ ವ್ಯಾಪ್ತಿಯ ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳನ್ನು ಷರತ್ತುಗಳ ಆಧಾರದ ಮೇಲೆ ಜೂನ್ 8ರಿಂದ ತೆರೆಯಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದರು.

ಚಾಮುಂಡಿಬೆಟ್ಟ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಗಳಿಗೆ ಶನಿವಾರ, ಭಾನುವಾರ ಮತ್ತು ಸಾರ್ವಜನಿಕ ರಜಾ ದಿನಗಳಂದು ಹೆಚ್ಚಿನ ಜನರು ಭೇಟಿ ನೀಡುವುದರಿಂದ ದೇವರ ದರ್ಶನವನ್ನು ನಿಷೇಧಿಸಲಾಗಿದೆ.

ADVERTISEMENT

ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ, ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಮಾತ್ರ ಭಕ್ತರ ದೇವರ ದರ್ಶನಕ್ಕೆ ಅವಕಾಶವಿರಲಿದೆ.

ಚಾಮುಂಡಿಬೆಟ್ಟಕ್ಕೆ ತಾವರೆಕಟ್ಟೆ ಕಡೆಯಿಂದ ಬೆಟ್ಟಕ್ಕೆ ಬರುವ ರಸ್ತೆಯಿಂದ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದ್ದು, ಉಳಿದ ರಸ್ತೆಗಳಿಂದ ಪ್ರವೇಶ ನಿಷೇಧಿಸಲಾಗಿದೆ. ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವರಿಗೆ ಮುಡಿ ಸಮರ್ಪಿಸುವುದಕ್ಕೆ ನಿರ್ಬಂಧ ಹೇರಲಾಗಿದೆ.

ದೇವಾಲಯದಲ್ಲಿ ನಿತ್ಯವೂ ಜರುಗುವ ಧಾರ್ಮಿಕ ಕಾರ್ಯಗಳನ್ನು ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿ ಉಪಸ್ಥಿತಿಯಲ್ಲಿ ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.