ಬೆಂಗಳೂರು: ‘ಶಿವಮೊಗ್ಗ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಎಂಟು ಮಂದಿಯನ್ನು ಬಂಧಿಸಿದ್ದು, ಇನ್ನೂ ಕೆಲವರ ವಿಚಾರಣೆ ನಡೆಯುತ್ತಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಗುರುವಾರ ಬೆಳಿಗ್ಗೆ ನಗರದಿಂದ ಶಿವಮೊಗ್ಗಕ್ಕೆ ಹೊರಡುವ ಮೊದಲ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಘಟನೆಯನ್ನು ಬೇರೆ ಬೇರೆ ಆಯಾಮಗಳಲ್ಲಿ ಸಂಪೂರ್ಣವಾಗಿ ತನಿಖೆ ನಡೆಸಲಾಗುವುದು. ಘಟನೆಯ ಹಿಂದೆ ಮತೀಯ ಸಂಘಟನೆಗಳಿವೆ ಎಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ, ಮತೀಯ ಸಂಘಟನೆಗಳ ಜೊತೆ ಕೃತ್ಯದಲ್ಲಿ ಭಾಗಿಯಾದವರು ಯಾವ ರೀತಿ ಗುರುತಿಸಿಕೊಂಡಿದ್ದಾರೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ’ ಎಂದರು.
‘ಸದ್ಯ ಶಿವಮೊಗ್ಗದಲ್ಲಿ ಸ್ಥಿತಿ ನಿಯಂತ್ರಣದಲ್ಲಿದೆ. ಮುಖ್ಯಮಂತ್ರಿ, ಹಿರಿಯ ಅಧಿಕಾರಿಗಳ ಜೊತೆ ನಾನು ಈಗಾಗಲೇ ಮಾತನಾಡಿದ್ದೇನೆ. ಶಿವಮೊಗ್ಗಕ್ಕೆ ತೆರಳಿ ಅಲ್ಲಿನ ಅಧಿಕಾರಿಗಳ ಜೊತೆಗೂ ಪರಿಸ್ಥಿತಿಯ ಬಗ್ಗೆ ಚರ್ಚೆ ಮಾಡುತ್ತೇನೆ’ ಎಂದರು.
‘ಈ ಘಟನೆ ದುರದೃಷ್ಟಕರ ಸಂಗತಿ. ಹತ್ಯೆ ಆದವನ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಈ ಕೃತ್ಯದಲ್ಲಿ ಭಾಗಿಯಾದವರಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಎಲ್ಲ ಎಲ್ಲ ರೀತಿಯಿಂದಲೂ ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ’ಎಂದರು.
‘ಪ್ರಚೋದನಕಾರಿ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲ ತಾಣಗಳ ಮೇಲೂ ಕಣ್ಣಿಟ್ಟಿದ್ದೇವೆ. ಹೇಗೆ ಬೇಕಾದರೂ, ಏನೂ ಬೇಕಾದರೂ ಸಾಮಾಜಿಕ ಜಾಲತಾಣಗಳಲ್ಲಿ ಹಾಕಲು ಅವಕಾಶ ಇಲ್ಲ. ಅಂಥವರನ್ನು ಬಂಧಿಸಿ, ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸಲು ಪೊಲೀಸ್ ಸಿಬ್ಬಂದಿ ಇದ್ದಾರೆ. ಈ ಮಾಧ್ಯಮವನ್ನು ವಿವೇಚನಾತ್ಮಕವಾಗಿ ಬಳಸಬೇಕು‘ ಎಂದೂ ಅವರು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ತುಂಡು ತುಂಡು ಮಾಡುತ್ತೇವೆ ಎಂದು ಕಲಬುರಗಿಯಲ್ಲಿ ಹೇಳಿಕೆ ನೀಡಿರುವ ಮುಕ್ರಂ ಖಾನ್ ತಲೆಮರೆಸಿಕೊಂಡಿದ್ದು, ಬಂಧಿಸುವ ಕೆಲಸ ಮಾಡುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.