ADVERTISEMENT

ಕೋವಿಡ್‌ ನಿರ್ಬಂಧ ಉಲ್ಲಂಘಿಸಿದರೆ ಕಾನೂನು ಕ್ರಮ: ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2022, 6:53 IST
Last Updated 6 ಜನವರಿ 2022, 6:53 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ    

ಬೆಂಗಳೂರು: ‘ಸಾರ್ವಜನಿಕರ ಹಿತಾಸಕ್ತಿಯಿಂದ ವಿಧಿಸಿರುವ ಕೋವಿಡ್ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಉದ್ದೇಶಿತ ಪಾದಯಾತ್ರೆ ಕಾರ್ಯಕ್ರಮದ ಬಗ್ಗೆ ಕಾಂಗ್ರೆಸ್ ನಾಯಕರ ಮರು ಆಲೋಚಿಸಬೇಕು. ಕಾರ್ಯಕ್ರಮವನ್ನು ಮುಂದೂಡಬೇಕು’ ಎಂದು ಸಲಹೆ ನೀಡಿದರು.

‘ರಾಜ್ಯದಲ್ಲಿ ಅದರಲ್ಲಿಯೂ ವಿಶೇಷವಾಗಿ ರಾಜಧಾನಿ ಬೆಂಗಳೂರು ನಗರದಲ್ಲಿ ಕೋವಿಡ್‌ ಪ್ರಕರಣಗಳು ಆತಂಕಕಾರಿಯಾಗಿ, ಉಲ್ಬಣಗೊಳ್ಳುತ್ತಿದೆ. ಅದಕ್ಕೆ ಕಡಿವಾಣ ಹಾಕಬೇಕಾಗಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಕಾಳಜಿಯನ್ನು ಅರ್ಥೈಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ADVERTISEMENT

‘ರಾಜ್ಯ ಬಿಜೆಪಿ ನಗರದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಪಕ್ಷದ ಕಾರ್ಯಕ್ರಮವನ್ನು ಕೋವಿಡ್‌ ಹೆಚ್ಚುತ್ತಿರುವ ಕಾರಣಕ್ಕೆ ಮುಂದೂಡಿದೆ. ಕಾಂಗ್ರೆಸ್ ಪಕ್ಷ ಕೂಡಾ ತಮ್ಮ ಕಾರ್ಯಕ್ರಮ ಮುಂದೂಡಲಿ. ಕೋವಿಡ್‌ ಸೋಂಕು ತಡೆಗಟ್ಟುವ ಸಲುವಾಗಿ ಸರ್ಕಾರದ ಜೊತೆಗೆ ಕೈ ಜೋಡಿಸಿ ಸಹಕರಿಸಬೇಕು’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.